ಬೆಂಗಳೂರು: ಹಳೇ ಮದ್ರಾಸ್ ರಸ್ತೆಯಲ್ಲಿ ಸೆಪ್ಟೆಂಬರ್ 15ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ತಮಿಳುನಾಡಿನ ಸೇಲಂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಂದಿರಾನಗರದ ಶಶಿಕುಮಾರ್ (22) ಎಂಬುವರು ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ.
‘ತಮಿಳುನಾಡು ಮೂಲದ ಶಶಿಕುಮಾರ್, ನಗರದ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸೆ.15ರಂದು ಮಧ್ಯಾಹ್ನ 12ರ ಸುಮಾರಿಗೆ ಹಳೇ ಮದ್ರಾಸ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಹಿಂದಿನಿಂದ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು’ ಎಂದು ಇಂದಿರಾನಗರ ಸಂಚಾರ ಪೊಲೀಸರು ತಿಳಿಸಿದರು.
‘ಪೋಷಕರು ಶಶಿಕುಮಾರ್ ಅವರನ್ನು ಸೇಲಂನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ರಾತ್ರಿ 10.45ರ ಸುಮಾರಿಗೆ ಅಸುನೀಗಿದ್ದಾರೆ. ಘಟನೆ ಸಂಬಂಧ ಬಿಎಂಟಿಸಿ ಬಸ್ ಚಾಲಕ ಟಿ.ಕುಮಾರ್ ಎಂಬುವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದು ಮಾಹಿತಿ ನೀಡಿದರು.