ನವದೆಹಲಿ: ಬುಲಂದ್ಶಹರ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದ ಸಚಿವ ಅಜಂ ಖಾನ್ ವಿಚಾರಣೆಗೆ ಗೈರುಹಾಜರಾಗಿರುವುದಕ್ಕೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಅಜಂ ಖಾನ್ ಅವರಿಗೆ ಹೊಸದಾಗಿ ನೋಟಿಸ್ ಜಾರಿಗೊಳಿಸುವಂತೆಯೂ ನ್ಯಾಯಾಲಯ ಸಿಬಿಐಗೆ ಸೂಚಿಸಿದೆ. ‘ಅಜಂ ಖಾನ್ ವಿರುದ್ಧ ನೇರವಾದ ಆರೋಪಗಳು ಇರುವುದರಿಂದ ನ್ಯಾಯಾಲಯಕ್ಕೆ ಹಾಜರಾಗಬೇಕಾಗಿತ್ತು. ಹೀಗಾಗಿ ಖಾನ್ ಅವರಿಗೆ ನೋಟಿಸ್ ಜಾರಿಗೊಳಿಸಬೇಕು’ ಎಂದು ದೀಪಕ್ ಮಿಶ್ರಾ ಅವರನ್ನೊಳಗೊಂಡ ಪೀಠ ತಿಳಿಸಿತು.
ಖಾನ್ ಅವರಿಗೆ ನೋಟಿಸ್ ಸಲ್ಲಿಸಲು ಅನುಕೂಲವಾಗುವಂತೆ ಈ ಪ್ರಕರಣಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಸಿಬಿಐಗೆ ನೀಡುವಂತೆ ರಿಜಿಸ್ಟ್ರಾರ್ ಅವರಿಗೆ ನ್ಯಾಯಾಲಯ ಸೂಚಿಸಿತು.
ಖಾನ್ ಅವರು ಸಚಿವ ಸಂಪುಟದ ಸದಸ್ಯರಾಗಿರುವುದರಿಂದ ಉತ್ತರ ಪ್ರದೇಶ ಸರ್ಕಾರದ ಮೂಲಕ ಅವರಿಗೆ ನೋಟಿಸ್ ಜಾರಿಗೊಳಿಸಬೇಕು ಎಂದು ಸಿಬಿಐ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಮಣಿಂದರ್ ಸಿಂಗ್ ಅಭಿಪ್ರಾಯಪಟ್ಟರು. ಆಗ ನ್ಯಾಯಮೂರ್ತಿಗಳು ‘ಖಾನ್ ಅವರು ತಮ್ಮ ವೈಯಕ್ತಿಕ ಸಾಮರ್ಥ್ಯದ ಮೇಲೆ ಹೇಳಿಕೆ ನೀಡಿರಬಹುದು’ ಎಂದು ಪ್ರತಿಕ್ರಿಯಿಸಿದರು.