ಮಡಿಕೇರಿ: ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಸ್ವಸ್ಥ, ಸದೃಢ ಭಾರತ ನಿರ್ಮಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಶಾಸಕ ಕೆ.ಜಿ. ಬೋಪಯ್ಯ ಕರೆ ನೀಡಿದರು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿಯ ವೈದ್ಯಕೀಯ ಪ್ರಕೋಷ್ಠದ ವತಿಯಿಂದ ವೀರಾಜಪೇಟೆ ತಾಲ್ಲೂಕಿನ ಬೊಮ್ಮಾಡು ಗಿರಿಜನ ಕಾಲೊನಿಯಲ್ಲಿ ನಡೆದ ಉಚಿತ ಆರೋಗ್ಯ ಶಿಬಿರದಲ್ಲಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ರಾಷ್ಟ್ರೀಯ ಭಿಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಭಿಮಾ ಯೋಜನೆ, ವಾಜಪೇಯಿ ಆರೋಗ್ಯ ಶ್ರೀ, ರಾಷ್ಟ್ರೀಯ ಬಾಲಸ್ವಸ್ಥ ಕಾರ್ಯಕ್ರಮ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹೀಗೆ ಅನೇಕ ಆರೋಗ್ಯ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳ ಸದುಪಯೋಗ ಆಗಬೇಕು ಎಂದು ಹೇಳಿದರು.
ಬಿಜೆಪಿಯ ಜಿಲ್ಲಾ ಘಟಕದ ಅಧ್ಯಕ್ಷ ಮನು ಮುತ್ತಪ್ಪ ಮಾತನಾಡಿ, ಜಿಲ್ಲೆಯಾದ್ಯಂತ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬಡವರಿಗಾಗಿ ಕೇಂದ್ರ ಸರ್ಕಾರದ ಆರೋಗ್ಯ ಸಂಬಂಧಿತ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವ ಪ್ರಯತ್ನವನ್ನು ಮಾಡಿದೆ. ಇದೇ ರೀತಿ ಬಿಜೆಪಿಯ ವಿವಿಧ ಪ್ರಕೋಷ್ಠಗಳು ತಮ್ಮ ಕಾರ್ಯ ಕ್ಷೇತ್ರದಲ್ಲಿ ನಿಷ್ಠೆಯಿಂದ ಕಾರ್ಯ ನಿರ್ವಹಿಸಿದರೆ ಪಕ್ಷವನ್ನು ಇನ್ನಷ್ಟು ಸದೃಢಗೊಳಿಸಬಹುದು ಎಂದು ಅಭಿಪ್ರಾಯಪಟ್ಟರು.
ವೈದ್ಯ ನವೀನ್ ಕುಮಾರ್ ಮಾತನಾಡಿ, ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ ಬಡವರಿಗಾಗಿ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿದೆ. ಬಿಜೆಪಿ ಉದ್ದೇಶ ಕೇವಲ ನಗರಪ್ರದೇಶಕ್ಕೆ ಸೀಮಿತವಾಗಿದೆಯೆಂಬ ಪರಿಕಲ್ಪನೆಯನ್ನು ಹೋಗಲಾಡಿಸುವುದು ಮತ್ತು ಗ್ರಾಮೀಣ ಪ್ರದೇಶದಲ್ಲಿ ಬಿಜೆಪಿ ಉತ್ತಮವಾಗಿ ಬೆಳೆಯುತ್ತಿದೆ ಎಂದು ಹೇಳಿದರು.
ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿ ಸುಬ್ರಮಣಿ ಮಾತನಾಡಿ, ಕೇಂದ್ರ ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನು ಬಡತನ ರೇಖೆಗಿಂತ ಕೆಳಗಿನವರಿಗೆ ಜಾರಿಗೆ ತಂದಿದೆ. ಈ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಂಡು ತಮ್ಮ ಜೀವನವನ್ನು ಉತ್ತಮ ಪಡಿಸಿಕೊಂಡರೆ ಪ್ರಧಾನಿಯವರ ಯೋಜನೆಗಳಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು.
ಡಾ.ಮಾತಂಡ ಅಯ್ಯಪ್ಪ, ಹೃದಯ ತಜ್ಞ ಡಾ.ಇರ್ಫಾನ್, ಮಕ್ಕಳ ತಜ್ಞ ಡಾ. ನವೀನ್ ಕುಮಾರ್, ಆಯುರ್ವೇದ ತಜ್ಞ ಡಾ.ಉದಯಕುಮಾರ್, ಡಾ. ಸಂತೋಷ್, ದಂತ ವೈದ್ಯ ಧ್ಯಾನ್ ಕುಶಾಲಪ್ಪ ಹಾಗೂ ಸಿಬ್ಬಂದಿ ಇದ್ದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಅರುಣ್ ಭೀಮಯ್ಯ, ಬೊಮ್ಮಾಡಿ ಹಾಡಿಯ ಅಧ್ಯಕ್ಷ ಸೋಮಯ್ಯ, ತಾಲ್ಲೂಕು ಪಂಚಾಯಿತಿ ಸದಸ್ಯ ಪ್ರಕಾಶ್, ತಾಲ್ಲೂಕು ಪಂಚಾಯಿತಿ ಸದಸ್ಯ ಚಲನ್, ವಿಜು ಸುಬ್ರಮಣಿ, ಭರತ್, ಪ್ರಕಾಶ್ ಉಪಸ್ಥಿತರಿದ್ದರು.