ಹಾಸನ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ ಕನ್ನಡಕ್ಕೆ ಆದ್ಯತೆ ನೀಡದೆ ಮಲತಾಯಿ ಧೋರಣೆ ಅನುಸರಿಸಿದ ಕೇಂದ್ರ ಸರ್ಕಾರ ತನ್ನ ಪಟ್ಟು ಸಡಿಲಿಸಿ ಪರೀಕ್ಷೆಯನ್ನು ಕನ್ನಡದಲ್ಲೇ ಬರೆಯಲು ಅವಕಾಶ ಮಾಡಿಕೊಡಬೇಕು ಎಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾ ಘಟಕ ಅಧ್ಯಕ್ಷ ಅಕ್ಮಲ್ ಜಾವೀದ್ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಉದ್ದೇಶದಿಂದ ಆರೋಪ, ಪ್ರತ್ಯಾರೋಪಗಳಲ್ಲೇ ತೊಡಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರ ಲಕ್ಷಾಂತರ ವಿದ್ಯಾರ್ಥಿಗಳಭವಿಷ್ಯದ ಜತೆ ಚೆಲ್ಲಾಟವಾಡುತ್ತಿವೆ. ಸಮರ್ಪಕ ಮಾಹಿತಿ ನೀಡಿಲ್ಲವೆಂದು ಆಪಾದಿಸುವ ಕೇಂದ್ರದ ಮುಖಂಡರು
ತಮ್ಮದೇ ಪಕ್ಷದ ಸಚಿವರಿಂದ ಅಗತ್ಯ ಮಾಹಿತಿ ಪಡೆಯಬಹುದಿತ್ತಲ್ಲವೇ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ 17 ಮಂದಿ ಬಿಜೆಪಿ ಸಂಸದರಿದ್ದು, ಎಲ್ಲರೂ ಒಟ್ಟುಗೂಡಿ ಕೇಂದ್ರಕ್ಕೆ ಮನವಿ ಸಲ್ಲಿಸಬೇಕು. ನೀಟ್ ಪರೀಕ್ಷೆಯನ್ನು ಕನ್ನಡದಲ್ಲೇ ಬರೆಯಲು ಅವಕಾಶ ಮಾಡಿಕೊಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಮಾದದಿಂದ ತಪ್ಪಿಸಿಕೊಳ್ಳಲು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ರಾಜಕೀಯ ಉದ್ದೇಶ ಬಿಟ್ಟು ಪರೀಕ್ಷೆ ಸುಗಮಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರ ಮತ್ತೊಂದು ಪ್ರಸ್ತಾವ ಸಲ್ಲಿಸಿದರೆ ಕನ್ನಡಕ್ಕೆ ಅವಕಾಶ ನೀಡುವುದಾಗಿ ಕೇಂದ್ರ ಹೇಳಿದೆ. ಆದರೆ ಸರ್ಕಾರದ ಎಲ್ಲ ಕಾರ್ಯಗಳು ವಿಳಂಬವಾಗಿ ಸಾಗುವುದರಿಂದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ ಎಂದರು.
ಬೇರೆ ಎಲ್ಲ ಕೆಲಸ ಬಿಟ್ಟು ಈ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಜಿಯಾವುದ್ದೀನ್ ಹಾಗೂ ಮುಜ್ಜು ಗೋಷ್ಠಿಯಲ್ಲಿ ಇದ್ದರು.