ಚಾಮರಾಜನಗರ: ಗ್ರಾಮೀಣ ಭಾಗದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ಕುರಿತು ಜಿಲ್ಲಾ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಸದಸ್ಯರು ಗಂಭೀರ ಚರ್ಚೆ ನಡೆಸಿದರು.
ಜಿಲ್ಲೆಯ ಹನೂರು ಶೈಕ್ಷಣಿಕ ವಲಯ ಸೇರಿದಂತೆ ಬಹುತೇಕ ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಉಂಟಾಗಿದೆ. ಕೆಲವು ಶಾಲೆಗಳಲ್ಲಿ ಕೊಠಡಿಗಳಿಲ್ಲದೆ ಶಾಲೆಯ ಎಲ್ಲ ಮಕ್ಕಳು ಒಂದೇ ಕೊಠಡಿಯಲ್ಲಿ ಪಾಠ ಕೇಳುವಂತಾ ಗಿದೆ. ಇದರಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತಿಲ್ಲ ಎಂದು ದೂರಿದರು.
ಮಧುವನಹಳ್ಳಿ ಪ್ರೌಢಶಾಲೆ ಶಿಕ್ಷಕರೊಬ್ಬರು ಅನಧಿಕೃತವಾಗಿ ಗೈರು ಹಾಜರಾಗಿದ್ದಾರೆ. ಅವರ ವಿರುದ್ಧ ಇಲಾಖೆ ಕ್ರಮಕೈಗೊಳ್ಳಬೇಕು ಎಂದು ಸದಸ್ಯರು ಆಗ್ರಹಿಸಿದರು.
ಅಧ್ಯಕ್ಷ ಎಂ. ರಾಮಚಂದ್ರ ಮಾತನಾಡಿ, ಶಿಕ್ಷಣ ಇಲಾಖೆ ಅಗತ್ಯವಿರುವ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಬೇಕು. ಶಾಲಾ ಕೊಠಡಿ ನಿರ್ಮಾಣಕ್ಕೆ ಶಾಸಕರ ಹಾಗೂ ಜಿ.ಪಂ ಬಳಿ ಯಾವುದೇ ಅನುದಾನವಿಲ್ಲ. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯ ಲಾಗುವುದು ಎಂದರು.
ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಮಂಜುಳಾ ಮಾತನಾಡಿ, ಮಧುವನ ಹಳ್ಳಿ ಶಿಕ್ಷಕ ಗೈರು ಹಾಜರಾತಿ ಬಗ್ಗೆ ಹಿಂದಿನ ಡಿಡಿಪಿಐ ಅವರು ವರದಿ ಮಾಡಿಲ್ಲದ ಕಾರಣ ಕ್ರಮ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ವರದಿ ಸಂಗ್ರಹಿಸಲಾಗಿದೆ. ಶಿಕ್ಷಕರ ವಿಚಾರಣೆ ನಡೆಸಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದರು.
ಶಿಕ್ಷಕರ ಕೊರತೆಯಿರುವ ಶಾಲೆಗಳಿಗೆ ಅತಿಥಿ ಶಿಕ್ಷಕರ ನೇಮಕ ಮಾಡಲಾಗುತ್ತಿದೆ. ಆದರೆ, ಕೆಲವು ಕಡೆ ವಿಷಯವಾರು ಶಿಕ್ಷಕರು ಇಲ್ಲದ ಕಾರಣ ಶಿಕ್ಷಕರ ಕೊರತೆ ಉಂಟಾಗಿದೆ. ಶಿಕ್ಷಕರ ನಿಯೋಜಿಸ ಲಾಗುವುದು ಎಂದರು.
ಜಿ.ಪಂ ಸಿಇಒ ಹೆಫ್ಸಿಬಾ ರಾಣಿ ಕೊರ್ಲಪಾಟಿ ಮಾತನಾಡಿ, ಗೈರು ಹಾಜರಾಗಿರುವ ಶಿಕ್ಷಕರ ವಿರುದ್ಧ ರಾಜ್ಯಮಟ್ಟದ ಅಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದರು.
ಅಕ್ರಮ ಸಾಬೀತಾದರೆ ಕ್ರಮ: ಅಂಗನವಾಡಿ ನೌಕರರ ನೇಮಕಾತಿಯಲ್ಲಿ ಅಧಿಕಾರಿಗಳು ಅಕ್ರಮ ನಡೆಸಿರುವುದು ಸಾಬೀತಾದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿ.ಪಂ ಅಧ್ಯಕ್ಷ ಎಂ. ರಾಮಚಂದ್ರ ಎಚ್ಚರಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ. ಸರ್ವೇಶ್ವರ ಮಾತನಾಡಿ, ಕೇಂದ್ರ ಸರ್ಕಾರ ಮತ್ತು ಜಿಲ್ಲಾ ಮಟ್ಟದ ಸುತ್ತೋಲೆಯ ನಿಯಮದಂತೆ ನೌಕರರ ನೇಮಕಾತಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.