ಕುಷ್ಟಗಿ: ಮಹಿಳೆಯರಿಗೆ ಮೊದಲ ಬಾರಿಗೆ ಶಿಕ್ಷಣ ನೀಡುವುದನ್ನು ಆರಂಭಿಸಿದ್ದ ಸಾವಿತ್ರಿಬಾಯಿ ಫುಲೆ ಅವರ ಜಯಂತಿಯನ್ನು ಆಚರಿಸಲು ಮಾನವ ಬಂಧುತ್ವ ವೇದಿಕೆ ಜಿಲ್ಲಾ ಘಟಕ ನಿರ್ಧರಿಸಿದೆ.
ಜನ್ಮದಿನಾಚರಣೆ ಜ. 3ರಂದು ಕುಷ್ಟಗಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಸೋಮವಾರ ಪಟ್ಟಣದಲ್ಲಿ ನಡೆದ ಪೂರ್ವಸಿದ್ಧತೆ ಸಭೆಯಲ್ಲಿ ನಿರ್ಧರಿಸಲಾಯಿತು. ವಿವಿಧೆಡೆ ನಡೆಯುವ ಕಾರ್ಯಕ್ರಮದ ಕೊನೆಗೆ ಕೊಪ್ಪಳದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಭಾಗವಹಿಸುವರು.
ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಾನವ ಬಂಧುತ್ವ ವೇದಿಕೆ ಜಿಲ್ಲಾ ಘಟಕದ ಸಂಚಾಲಕ ಟಿ.ರತ್ನಾಕರ, ಸಾವಿತ್ರಿಬಾಯಿ ಫುಲೆ ಜನ್ಮದಿನ ಆಚರಣೆಯಲ್ಲಿ ವಿವಿಧ ಕ್ಷೇತ್ರಗಳ ಪ್ರಮುಖರು ವಿಶೇಷ ಉಪನ್ಯಾಸ ನೀಡುವರು ಎಂದರು. ಮಾನವ ಬಂಧುತ್ವ ವೇದಿಕೆ ಮಹಿಳಾ ಘಟಕದ ಜಿಲ್ಲಾ ಸಂಚಾಲಕಿ ಮಾಲತಿ ನಾಯಕ, ತಾಲ್ಲೂಕು ಮಹಿಳಾ ಘಟಕದ ಸಂಚಾಲಕಿ ಭಾರತಿ ನೀರಗೇರಿ, ಸಂಚಾಲಕ ಶಿವಪುತ್ರಪ್ಪ ಗುಮಗೇರಿ, ಯಲಬುರ್ಗಾ ತಾಲ್ಲೂಕು ಸಂಚಾಲಕ ಯಮನೂರಪ್ಪ ಗೊರ್ಲೆಕೊಪ್ಪ, ಪ್ರಮುಖರಾದ ಶುಕರಾಜ ತಾಳಕೇರಿ, ಭೀಮಣ್ಣ ಅವಳಿ, ಶಕುಂತಲಾ ಬಿಸನಳ್ಳಿ ಇದ್ದರು.