ಮಾಲೂರು: ತಾಲ್ಲೂಕಿನ ಚಿಕ್ಕತಿರುಪತಿ ವೆಂಕಟರಮಣಸ್ವಾಮಿ ದೇಗುಲದಲ್ಲಿ ಜ.8ರಂದು ನಡೆಯುವ ವೈಕುಂಠ ಏಕಾದಶಿ ಅಂಗವಾಗಿ ಭಕ್ತರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು ಜಿಲ್ಲಾ ಉಪ ವಿಭಾಗಾಧಿಕಾರಿ ಮಂಜುನಾಥ್ ತಿಳಿಸಿದರು.
ತಾಲ್ಲೂಕಿನ ಚಿಕ್ಕತಿರುಪತಿಯ ವೆಂಕಟರಮಣಸ್ವಾಮಿ ದೇಗುಲದಲ್ಲಿ ಬುಧವಾರ ವೈಕುಂಠ ಏಕಾದಶಿ ಅಂಗವಾಗಿ ದೇವಾಲಯದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿಯೇ ಪ್ರಸಿದ್ಧ ಯಾತ್ರಾ ಸ್ಥಳವಾದ ಚಿಕ್ಕತಿರುಪತಿ ವೆಂಕಟರಮಣಸ್ವಾಮಿ ದೇವಾಲಯಕ್ಕೆ ಬೆಂಗಳೂರು, ತಮಿಳುನಾಡು, ಆಂಧ್ರಪ್ರದೇಶದಿಂದಲೂ ಸಾವಿರಾರು ಭಕ್ತರು ಬರುತ್ತಾರೆ. ಭಕ್ತರಿಗೆ ಸುರಕ್ಷಿತವಾಗಿ ದರ್ಶನ ಪಡೆಯಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಭಕ್ತರಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಮುಡಿ ನೀಡುವ ಭಕ್ತರಿಗೆ ಸ್ನಾನದ ಕೊಠಡಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ದೇವಾಲಯಕ್ಕೆ ಒಂದು ಲಕ್ಷಕ್ಕಿಂತ ಹೆಚ್ಚು ಭಕ್ತರು ಬರುವ ನಿರೀಕ್ಷೆ ಇದೆ ಎಂದು ಹೇಳಿದರು.
ಸರ್ಕಲ್ ಇನ್ಸ್ಪೆಕ್ಟರ್ ಸತೀಶ್ , ಸಬ್ ಇನ್ಸ್ಪೆಕ್ಟರ್ ರಘು, ತಾಲ್ಲೂಕು ಪಂಚಾಯಿತಿ ಸದಸ್ಯ ಸಂಪಂಗೆರೆ ಮುನಿರಾಜು, ಮುಖಂಡರಾದ ಕಲ್ಕೇರಿ ಶ್ರೀನಿವಾಸ ಗೌಡ , ಅಗ್ರಿ ನಾರಾಯಣಪ್ಪ, ಬಾಲಪ್ಪ, ಟಿ.ವೆಂಕಟೇಶ್ಗೌಡ, ಸುರೇಶ್, ಶ್ರೀನಿವಾಸ್, ಕಾರ್ಯ ನಿರ್ವಹಣಾಧಿಕಾರಿ ಹಿರೇಮಠ್ ಉಪಸ್ಥಿತರಿದ್ದರು.