ಕಾರವಾರ: ಶಿರಸಿಯ ಟಿಎಸ್ಎಸ್ ಆಸ್ಪತ್ರೆಯ ವೈದ್ಯರ ಮೇಲೆ ಹಲ್ಲೆ ಮಾಡಿರುವ ಸಂಸದ ಅನಂತಕುಮಾರ ಹೆಗಡೆ ವಿರುದ್ಧ, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಆಗ್ರಹಿಸಿದರು.
ಬುಧವಾರ ಹೆಚ್ಚುವರಿ ಎಸ್ಪಿ ಕೆ.ಜಿ.ದೇವರಾಜ್ ಅವರಿಗೆ ಮನವಿ ಸಲ್ಲಿಸಿದ ಅವರು, ಆಸ್ಪತ್ರೆಯ ವೈದ್ಯರನ್ನು ಕೊರಳಪಟ್ಟಿ ಹಿಡಿದು ಹಿಗ್ಗಾ ಮುಗ್ಗಾ ಅನಂತಕುಮಾರ ಹೆಗಡೆ ಥಳಿಸುತ್ತಿರುವ ದೃಶ್ಯಾವಳಿಗಳು ಅನೇಕ ಟಿ.ವಿ. ಮಾಧ್ಯಮಗಳಲ್ಲಿ ಮಂಗಳವಾರದಿಂದ ಪ್ರಸಾರವಾಗುತ್ತಿವೆ. ತನ್ನ ತಾಯಿಗೆ ಸರಿಯಾಗಿ ಚಿಕಿತ್ಸೆ ನೀಡಲಿಲ್ಲ ಎನ್ನುವ ನೆಪ ಒಡ್ಡಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದರು ಹಲ್ಲೆಗೆ ಮುಂದಾಗಿರುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಹೇಳಿದರು.
ಮಂಗಳವಾರ ಭಾರತೀಯ ವೈದ್ಯಕೀಯ ಸಂಘ ಹಲ್ಲೆಯನ್ನು ಖಂಡಿಸಿ ಶಿರಸಿಯಲ್ಲಿ ಉಪ ವಿಭಾಗಾಧಿಕಾರಿಗಳಿಗೆ ಮನವಿ ನೀಡಿದೆ. ಆದರೆ ಇದೂವರೆಗೂ ಹಲ್ಲೆ ಮಾಡಿದ ಸಂಸದರ ವಿರುದ್ಧ ಯಾವುದೇ ಪ್ರಕರಣ ದಾಖಲಾಗದಿರುವುದು ವಿಷಾದದ ಸಂಗತಿಯಾಗಿದೆ. ಜನಸಾಮಾನ್ಯರು ನ್ಯಾಯಕ್ಕಾಗಿ ಹೋರಾಟ ಮಾಡಿದರೆ ಪೊಲೀಸ್ ಇಲಾಖೆ ಪ್ರಕರಣ ದಾಖಲಿಸಿ ಅವರ ಹೋರಾಟವನ್ನು ವ್ಯವಸ್ಥಿತವಾಗಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಆದರೆ ಸಂಸದರ ವಿರುದ್ಧ ಪ್ರಕರಣ ದಾಖಲಿಸಲು ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದರು.
ಭಯದ ಕಾರಣಕ್ಕೆ ಹಲ್ಲೆಗೊಳಗಾದ ವೈದ್ಯರು ಸಂಸದರ ವಿರುದ್ಧ ಪ್ರಕರಣ ದಾಖಲಿಸಲು ಹಿಂದೇಟು ಹಾಕಿರಬಹುದಾದ ಸಾಧ್ಯತೆ ಇದೆ. ಜನ ಸಾಮಾನ್ಯರು ಪೊಲೀಸ್ ವ್ಯವಸ್ಥೆಯ ಮೇಲೆ ವಿಶ್ವಾಸ ಉಳಿಸಿಕೊಳ್ಳಬೇಕು. ಹೀಗಾಗಿ ಎಲ್ಲ ಸಾಕ್ಷಿಗಳನ್ನು ಪರಿಶೀಲಿಸಿ ಸಂಸದರ ವಿರುದ್ಧ ಸ್ವಯಂ ಪ್ರಕರಣ ದಾಖಲಿಸಬೇಕೆಂದು ಅವರು ಮನವಿಯಲ್ಲಿ ಒತ್ತಾಯಿಸಿದರು.