ಗದಗ: ಕೆಲಸದ ಮೇಲಿನ ಪ್ರೀತಿ, ನಿಷ್ಠೆ ಹಾಗೂ ಜನರು, ಜನಪ್ರತಿನಿಧಿಗಳ, ಅಧಿಕಾರಿಗಳ, ಸಿಬ್ಬಂದಿಯ ವಿಶ್ವಾಸ ದಿಂದ ಜಿಲ್ಲೆಯಲ್ಲಿ ಮೂರು ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗಿದೆ ಎಂದು ಗದುಗಿನ ಜಿಲ್ಲಾಧಿಕಾರಿ ಹುದ್ದೆಯಿಂದ, ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಹುದ್ದೆಗೆ ವರ್ಗವಾಗಿರುವ ಎನ್.ಎಸ್.ಪ್ರಸನ್ನಕುಮಾರ್ ಹೇಳಿದರು.
ಜಿಲ್ಲಾಡಳಿತ ಸಭಾಭವನದಲ್ಲಿ ಜಿಲ್ಲಾ ಡಳಿತ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಗದಗ ಜಿಲ್ಲೆಯ ಐದು ತಾಲ್ಲೂಕು ಗಳು ಭೌಗೋಳಿಕವಾಗಿ ಅಷ್ಟೇ ಅಲ್ಲ ಸಾಂಸ್ಕೃತಿಕವಾಗಿಯೂ ಭಿನ್ನವಾಗಿವೆ. ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಮುಂದು ವರೆದಿದ್ದು, ಕುರಿತು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಲಭ್ಯವಿರುವ ನೀರನ್ನು ಮಿತವಾಗಿ ಬಳಕೆ ಮಾಡಿಕೊಳ್ಳಬೇಕು. ರೈತಾಪಿ ಜನರು ಸಂಕಷ್ಟ ನಿವಾರಣೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಜವಾಬ್ದಾರಿಯಿಂದ ಹಾಗೂ ಮಾನವೀಯತೆಯಿಂದ ಕಾರ್ಯ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಹಸಿರು ಹೆಚ್ಚಿಸುವ ಕಾರ್ಯಕ್ಕೆ ಎಲ್ಲ ಇಲಾಖೆಗಳ ಜತೆಗೆ ರೈತರು, ಜನಸಾಮಾನ್ಯರು ವಿಶೇಷ ಗಮನಹರಿಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ, ಜಿಲ್ಲಾಧಿಕಾರಿ ಮನೋಜ್ ಜೈನ್, ಹೆಚ್ಚುವರಿ ಜಿಲ್ಲಾಧಿಕಾರಿ ಐ.ಜಿ.ಗದ್ಯಾಳ, ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕ ರಮೇಶ ದೇಸಾಯಿ, ನಗರಸಭೆಯ ಪೌರಾಯುಕ್ತ ಮನ್ಸೂರ ಅಲಿ, ಉಪ ಅರಣ್ಯ ಸಂರಕ್ಷ ಣಾಧಿಕಾರಿ ಯಶಪಾಲ ಕ್ಷೀರಸಾಗರ್ ಮಾತನಾಡಿದರು.
ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಹಿರಿಯ ಅಧಿಕಾ ರಿಗಳು, ಸಿಬ್ಬಂದಿ, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಇದ್ದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವಿ ಗುಂಜಿಕರ ಪ್ರಾಸ್ತಾವಿಕವಾಗಿ ಮಾತನಾಡಿದರು, ಬಾ ಹುಬಲಿ ಜೈನರ್ ನಿರೂಪಿಸಿದರು.