ವಿಜಯಪುರ: ಉತ್ಕೃಷ್ಟ ಗುಣಮಟ್ಟದ ಶ್ರೀಗಂಧದ ಎಣ್ಣೆಯುಕ್ತ ಸಾಬೂನು ಮೇಳವನ್ನು ಹಮ್ಮಿಕೊಂಡಿರುವುದು ಅತ್ಯಂತ ಉಪಯುಕ್ತವಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ನಗರದ ಶಿವಾನುಭವ ಮಂಟಪದಲ್ಲಿ ಸಾಬೂನು ಮತ್ತು ಮಾರ್ಜಕ ನಿಯಮಿತ ವತಿಯಿಂದ ಮಂಗಳವಾರ ಪ್ರಾರಂಭ ಗೊಂಡ ಸಾಬೂನು ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿ, ಅನೇಕ ರೀತಿಯ ಸಾಬೂನು ಸೇರಿದಂತೆ ಇತರೆ ಉತ್ಪನ್ನಗಳು ಇಲ್ಲಿ ಮಾರಾಟಕ್ಕೆ ಲಭ್ಯವಿದ್ದು, ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.
ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷ ರಾಜು ಆಲಗೂರ ಮಾತನಾಡಿ, ಪ್ರತಿವರ್ಷ ಬೇರೆ ಬೇರೆ ಜಿಲ್ಲೆಗಳಲ್ಲಿ ಸೋಪ್ ಸಂತೆ ಎಂಬ ಸಾಬೂನು ಮಾರಾಟ ಮೇಳಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ. ಅದೇ ರೀತಿ ಜಿಲ್ಲೆಯಲ್ಲಿ ಇದೇ ಪ್ರಥಮ ಬಾರಿಗೆ ಈ ಮೇಳ ಆಯೋಜಿಸಲಾಗಿದ್ದು, ಮೈಸೂರು ಸ್ಯಾಂಡಲ್ ಸೋಪ್, ಮೈಸೂರು ಡಿಟರ್ಜಂಟ್, ಸೌಂದರ್ಯ ವರ್ಧಕ ಉತ್ಪನ್ನಗಳು, ಸ್ಯಾಂಡಲ್ ಬೇಬಿ ಸೋಪ್, ಹರ್ಬಲ್ ಹ್ಯಾಂಡ್ ವಾಶ್, ಸೇರಿದಂತೆ ಅನೇಕ ಉತ್ಪನ್ನಗಳು ಮಾರಾಟಕ್ಕೆ ಲಭ್ಯವಿದ್ದು, ವಿಜಯಪುರ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಯಮಿತ ವ್ಯವಸ್ಥಾಕ ಶ್ರೀನಿವಾಸರೆಡ್ಡಿ ಸ್ವಾಗತಿಸಿದರು. ಮೇಯರ್ ಅನೀಸ್ ಫಾತಿಮಾ ಬಕ್ಷಿ, ಪಾಲಿಕೆ ಸದಸ್ಯೆ ಲಕ್ಷ್ಮಿ ಕನ್ನೊಳ್ಳಿ, ಬಿಡಿಎ ಮಾಜಿ ಅಧ್ಯಕ್ಷ ಚಂದ್ರಕಾಂತ ಶೆಟ್ಟಿ ಇನ್ನಿತರರು ಉಪಸ್ಥಿತರಿದ್ದರು.