ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕ್ರೀಡಾ ನೀತಿಯ ಪರಿಣಾಮಕಾರಿ ಅನುಷ್ಠಾನ’

Last Updated 11 ಜನವರಿ 2017, 10:33 IST
ಅಕ್ಷರ ಗಾತ್ರ

ಮಂಗಳೂರು:  ಕ್ರೀಡಾ ಕ್ಷೇತ್ರದ ಸಮಗ್ರ ವಿಕಾಸವನ್ನು ಗಮನದಲ್ಲಿ ಇಟ್ಟುಕೊಂಡು ಕ್ರೀಡಾ ನೀತಿಯನ್ನು ರೂಪಿಸಲಾ ಗುತ್ತಿದ್ದು, ಅದರ ಪರಿಣಾಮಕಾರಿ ಅನುಷ್ಠಾನಕ್ಕೆ ಇಲಾಖೆ ಒತ್ತು ನೀಡಲಿದೆ ಎಂದು ಯುವಸಬಲೀಕರಣ, ಕ್ರೀಡೆ ಮತ್ತು ಮೀನುಗಾರಿಕೆ ಸಚಿವ ಪ್ರಮೋದ್‌ ಮಧ್ವರಾಜ್‌ ತಿಳಿಸಿದರು.

ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗ, ಭಾರತೀಯ ವಿಶ್ವ ವಿದ್ಯಾಲಯಗಳ ಒಕ್ಕೂಟಗಳ ಆಶ್ರಯ ದಲ್ಲಿ ಮಂಗಳವಾರ ಮಂಗಳೂರು ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ಆರಂಭವಾದ ನಾಲ್ಕು ದಿನಗಳ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಪುರುಷರ ಕೊಕ್ಕೊ ಟೂರ್ನಿ ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡಾ ಇಲಾಖೆಗೆ ಸರ್ಕಾರ ₹145 ಕೋಟಿ ಅನುದಾನ ನೀಡುತ್ತಿದೆ. ಇದನ್ನು ದ್ವಿಗುಣ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡ ಲಾಗಿದೆ. ಮುಖ್ಯಮಂತ್ರಿಗಳು ಪೂರಕ ವಾಗಿ ಸ್ಪಂದಿಸಿದ್ದಾರೆ ಎಂದ ಅವರು, ಆರೋಗ್ಯ ಇಲಾಖೆಗೆ ₹5 ಸಾವಿರ ಕೋಟಿಯಷ್ಟು ಅನುದಾನ ನೀಡಲಾ ಗುತ್ತಿದೆ. ಕ್ರೀಡೆಗೆ ಹೆಚ್ಚಿನ ಅನುದಾನ ನೀಡಿದಲ್ಲಿ, ಯುವಜನರ ಆರೋಗ್ಯದಲ್ಲಿ ಸುಧಾರಣೆ ಆಗಲಿದ್ದು, ಆರೋಗ್ಯ ಇಲಾಖೆಯ ಬೇಡಿಕೆಯೂ ತಗ್ಗಲಿದೆ ಎಂದರು.

ಮಂಗಳೂರು ವಿಶ್ವವಿದ್ಯಾಲಯ ಶೈಕ್ಷ ಣಿಕವಾಗಿ ಸಾಕಷ್ಟು ಸಾಧನೆ ಮಾಡಿದ್ದು, ಕ್ರೀಡಾ ಕ್ಷೇತ್ರಕ್ಕೂ ಹೆಚ್ಚಿನ ಒತ್ತು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ. ಭೈರಪ್ಪ ಮಾತನಾಡಿ, ಮಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯ ಕಾಲೇಜು ಗಳಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಪ್ರೋತ್ಸಾಹ ನೀಡುವ ಕೆಲಸ ಮಾಡಲಾಗುತ್ತಿದೆ. ಕ್ರೀಡಾ ಪಟುಗಳ ತರಬೇತಿ, ಸ್ಪರ್ಧೆಗಳಲ್ಲಿ ಭಾಗವಹಿಸಲು ಬೇಕಾಗುವ ಆರ್ಥಿಕ ನೆರವನ್ನು ವಿಶ್ವವಿದ್ಯಾಲಯ ನೀಡುತ್ತಿದೆ ಎಂದು ತಿಳಿಸಿದರು.

ವಿಶ್ವವಿದ್ಯಾಲಯದ ಕ್ರೀಡಾ ನೀತಿ ಹಾಗೂ ಮಾರ್ಗಸೂಚಿಯನ್ನು ಸಚಿವ ಪ್ರಮೋದ್‌ ಮಧ್ವರಾಜ್‌ ಬಿಡುಗಡೆ ಮಾಡಿದರು. ಅರ್ಜುನ ಪ್ರಶಸ್ತಿ ಪುರಸ್ಕೃತ ಕೊಕ್ಕೊ ಪಟು ಎಸ್‌. ಪ್ರಕಾಶ್‌ ಅವರನ್ನು ಸನ್ಮಾನಿಸಲಾಯಿತು. ಕುಲಸಚಿವ ಎ.ಎಂ. ಖಾನ್‌ ಸ್ವಾಗತಿಸಿದರು. ಪ್ರೀತಿ ನಾಯಕ್‌ ನಿರೂಪಿಸಿದರು. ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಸಿ.ಕೆ. ಕಿಶೋರ್‌ ಕುಮಾರ್‌ ವಂದಿಸಿದರು.

ಕ್ರೀಡಾಪಟುಗಳಿಂದಲೇ ಪರೀಕ್ಷೆ
ಕ್ರೀಡಾ ಸಾಮಗ್ರಿ ಖರೀದಿಯಲ್ಲಿ ಪಾರದರ್ಶಕತೆ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಇಲಾಖೆ ಕ್ರಮ ಕೈಗೊಂಡಿದ್ದು, ಪ್ರತಿಯೊಂದು ಸಾಮಗ್ರಿ ಖರೀದಿಗೂ ಮುನ್ನ ಸಂಬಂಧಿಸಿದ ಕ್ರೀಡಾಪಟುಗ ಳಿಂದಲೇ ಅವುಗಳ ಗುಣಮಟ್ಟ ಪರೀಕ್ಷಿಸಲಾಗುತ್ತಿದೆ ಎಂದು ಸಚಿವ ಪ್ರಮೋದ್‌  ಮಧ್ವರಾಜ್‌ ತಿಳಿಸಿದರು.

ಕ್ರೀಡಾ ನೀತಿಯ ಕರಡು ಪ್ರತಿ ಸಿದ್ಧವಾಗಿದ್ದು, ರಾಜ್ಯದ ಅರ್ಜುನ ಪ್ರಶಸ್ತಿ ಪುರಸ್ಕೃತ ಕ್ರೀಡಾ ಪಟುಗಳು, ವಿವಿಧ ಸಚಿವರಿಗೆ ಸಲ್ಲಿಸಲಾಗಿದೆ. ಅವರ ಅಭಿಪ್ರಾಯಗಳನ್ನು ಕೋಡಿಕರಿಸಿ, ಸಮಗ್ರ ಕ್ರೀಡಾ ನೀತಿಯನ್ನು ಬರುವ ಬಜೆಟ್‌ನಲ್ಲಿ ಮುಖ್ಯಮಂತ್ರಿ ಘೋಷಣೆ ಮಾಡಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT