ಮಡಿಕೇರಿ: ನಗರದ ಮಹದೇವಪೇಟೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ‘ಹೈಟೆಕ್್ ಮಾರುಕಟ್ಟೆ’ ಕಾಮಗಾರಿ ಮೇ ಅಂತ್ಯಕ್ಕೆ ಪೂರ್ಣಗೊಳ್ಳಲಿದ್ದು, ಜೂನ್ ಮೊದಲ ವಾರ ಸಾರ್ವಜನಿಕರಿಗೆ ಸಮರ್ಪಿಸಲಾಗುವುದು ಎಂದು ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಭರವಸೆ ನೀಡಿದರು.
ನಗರಸಭೆ ಸದಸ್ಯರೊಂದಿಗೆ ಬುಧವಾರ ನಿರ್ಮಾಣ ಹಂತದ ಮಾರುಕಟ್ಟೆ ಕಾಮಗಾರಿ ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ‘ಸರ್ಕಾರ ನಗರೋತ್ಥಾನ 1ನೇ ಹಂತದಲ್ಲಿ ಮಾರುಕಟ್ಟೆ ಕಾಮಗಾರಿಗೆ ₹ 5 ಕೋಟಿ ಬಿಡುಗಡೆ ಮಾಡಿದೆ. ಆದರೆ, ಕಳೆದ ಮೂರು ವರ್ಷಗಳಿಂದ ಮಾರುಕಟ್ಟೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಇದನ್ನು ಚುರುಕುಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ ಸಮಸ್ಯೆಯಾಗದ ರೀತಿಯಲ್ಲಿ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ನಗರೋತ್ಥಾನ 3ನೇ ಹಂತದಲ್ಲಿ ಕುಡಿಯುವ ನೀರು ಸೇರಿದಂತೆ ನಗರದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ₹ 35 ಕೋಟಿ ಅನುದಾನ ಮಂಜೂರಾಗಿದೆ. ಈಗಾಗಲೇ ₹ 29 ಕೋಟಿ ಬಿಡುಗಡೆಯಾಗಿದೆ. ಇದರಲ್ಲಿ ₹ 15 ಕೋಟಿಯನ್ನು ಕುಡಿಯುವ ನೀರು ಪೂರೈಕೆಗೆ ಮೀಸಲಿಡಲಾಗಿದೆ. ಉಳಿದ ಅನುದಾನವನ್ನು ವಾರ್ಡ್ಗಳ ಅಭಿವೃದ್ಧಿಗೆ ಬಳಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಲಾಗುವುದು. ಅಕ್ಟೋಬರ್ನಲ್ಲಿ ನಡೆದ ದಸರಾ ಕಾರ್ಯಕ್ರಮಕ್ಕಾಗಿ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಪ್ರಯತ್ನದಿಂದ ₹ 60 ಲಕ್ಷ ಬಿಡುಗಡೆಯಾಗಿದೆ ಎಂದು ವಿವರಿಸಿದರು.
ಸದಸ್ಯ ಎಚ್.ಎಂ.ನಂದಕುಮಾರ್, ಕೆ.ಎಂ.ಬಿ.ಗಣೇಶ್, ಮನ್ಸೂರ್, ಪೀಟರ್, ಪ್ರಕಾಶ್ ಆಚಾರ್ಯ, ಜುಲೈಕಾಬಿ, ಲೀಲಾ ಶೇಷಮ್ಮ, ಚುಮ್ಮಿ ದೇವಯ್ಯ, ವೆಂಕಟೇಶ್, ಉದಯ ಕುಮಾರ್, ಯತೀಶ್ ಕುಮಾರ್ ಇದ್ದರು.