ಚಾಮರಾಜನಗರ: ‘ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಬೇಕಿದೆ’ ಎಂದು ಸಂಸದ ಆರ್. ಧ್ರುವನಾರಾಯಣ ಒತ್ತಾಯಿಸಿದರು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಕೇಂದ್ರ ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಬುಧವಾರ ನಡೆದ ಜಿಲ್ಲಾಮಟ್ಟದ ಖೇಲೊ ಇಂಡಿಯಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಹಿಂದೆ ಈ ಕ್ರೀಡಾಕೂಟಕ್ಕೆ ರಾಜೀವ್ಗಾಂಧಿ ಖೇಲ್ ಅಭಿಯಾನ ಎಂಬ ಹೆಸರಿತ್ತು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಖೇಲೊ ಅಭಿಯಾನ ಜಾರಿಗೆ ಬಂದಿದೆ. ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಈ ಅಭಿಯಾನ ಆರಂಭಿಸ ಲಾಗಿದೆ ಎಂದರು.
ಖೇಲೊ ಅಭಿಯಾನಕ್ಕೆ ಅನುದಾನ ಕಡಿಮೆ ಇದೆ. ರಾಜೀವ್ಗಾಂಧಿ ಅಭಿಯಾನ ಜಾರಿಯಲ್ಲಿದ್ದ ವೇಳೆ ಜಿಲ್ಲಾ, ತಾಲ್ಲೂಕು ಮತ್ತು ಪಂಚಾಯಿತಿ ಮಟ್ಟದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲು ಹೆಚ್ಚು ಅನುದಾನ ಲಭಿಸುತ್ತಿತ್ತು ಎಂದು ತಿಳಿಸಿದರು.
‘ಪ್ರಸ್ತುತ ಅಭಿಯಾನದಡಿ ಕಡಿಮೆ ಅನುದಾನ ಲಭಿಸುತ್ತಿದೆ. ಈ ಬಗ್ಗೆ ಲೋಕಸಭೆಯಲ್ಲಿಯೂ ಚರ್ಚೆ ಮಾಡಿದ್ದೇನೆ. ಕ್ರೀಡೆಗೆ ಹೆಚ್ಚು ಉತ್ತೇಜನ ಸಿಗಲು ಅನುದಾನ ನೀಡಬೇಕು. ಜಿಲ್ಲಾ ಕ್ರೀಡಾಂಗಣವನ್ನು ಮಾದರಿಯಾಗಿ ರೂಪಿಸಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ಸಿಂಥೆಟಿಕ್ ಟ್ರ್ಯಾಕ್ಗೆ ನಿರ್ಮಿಸಲಾಗುತ್ತಿದೆ’ ಎಂದರು.
ಎಚ್.ಎಸ್. ಮಹದೇವಪ್ರಸಾದ್ ಅವರು ಕ್ರೀಡಾಂಗಣದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿದ್ದರು. ಬಜೆಟ್ನಲ್ಲಿ ಬಿಡುಗಡೆಯಾಗಿದ್ದ ₹ 50 ಕೋಟಿ ಅನುದಾನದಲ್ಲಿ ಕ್ರೀಡಾಂಗಣದ ಅಭಿವೃದ್ಧಿಗೆ ₹ 7.50 ಕೋಟಿ ಮೀಸಲಿಟ್ಟಿದ್ದಾರೆ ಎಂದು ಹೇಳಿದರು.
ವಿದ್ಯಾರ್ಥಿಗಳು ಪಾಠದ ಜತೆಗೆ ಕ್ರೀಡೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಬೇಕು. ಕ್ರೀಡೆಗೆ ಹೆಚ್ಚು ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ. ರಾಮಚಂದ್ರ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿಯ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿಸಮಿತಿ ಅಧ್ಯಕ್ಷ ಕೆ.ಪಿ. ಸದಾಶಿವಮೂರ್ತಿ, ನಗರಸಭೆ ಅಧ್ಯಕ್ಷೆ ಎಸ್.ಎನ್. ರೇಣುಕಾ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಂ. ಚೆಲುವಯ್ಯ ಹಾಜರಿದ್ದರು.