ಆನೇಕಲ್: ರಸ್ತೆಗಳ ಅಭಿವೃದ್ಧಿಯಿಂದ ಗ್ರಾಮಗಳ ಅಭಿವೃದ್ಧಿಯಾಗುತ್ತದೆ. ಹಾಗಾಗಿ ತಾಲ್ಲೂಕಿನ ಮುಖ್ಯರಸ್ತೆಗಳು ಸೇರಿದಂತೆ ಗ್ರಾಮೀಣ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಶಾಸಕ ಬಿ.ಶಿವಣ್ಣ ನುಡಿದರು.
ತಾಲ್ಲೂಕಿನ ಬಿದರಗುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಭೂಮಿ ಪೂಜೆ ಹಾಗೂ ಬಿದರಗುಪ್ಪೆ ಕೆರೆ ಏರಿಯ ಮೇಲೆ ₹ 3 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸೇತುವೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಗ್ರಾಮಗಳ ರಸ್ತೆಗಳನ್ನು ಸರ್ವ ಋತು ರಸ್ತೆಗಳಾಗಿ ಮಾಡುವ ದಿಸೆಯಲ್ಲಿ ಜನಪ್ರತಿನಿಧಿಗಳು ಹಾಗೂ ಮುಖಂಡರು ಗುರುತಿಸಿರುವ ರಸ್ತೆಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ತಯಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ನಿಟ್ಟಿನಲ್ಲಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಬಿದಗುಪ್ಪೆ–ಮೆಳ್ಳೆನಹಳ್ಳಿ–ನರಸಾಪುರ ರಸ್ತೆ ಅಭಿವೃದ್ದಿ, ಬಿದರಗುಪ್ಪೆ–ಅರೇನೂರು ರಸ್ತೆ ಡಾಂಬರೀಕರಣ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದರು.
ಸರ್ಜಾಪುರ–ಅತ್ತಿಬೆಲೆ ರಸ್ತೆಯ ಬಿದರಗುಪ್ಪೆ ಕೆರೆ ಏರಿಯ ಎರಡು ಭಾಗಗಳಲ್ಲಿ ರಸ್ತೆ ಕಿರಿದಾಗಿದ್ದು ಅಪಘಾತಗಳು ಹೆಚ್ಚಾಗಿ ನಡೆಯುತ್ತಿದ್ದವು. ಈ ಹಿನ್ನೆಲೆಯಲ್ಲಿ ತಾವು ಶಾಸಕರಾದ ಸಂದರ್ಭದಲ್ಲಿ ಜನರಿಗೆ ನೀಡಿದ ಭರವಸೆಯಂತೆ ಕೆರೆಯ ಎರಡು ಭಾಗಗಳಲ್ಲಿ ತಲಾ ₹ 1.5 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಸೇತುವೆ ನಿರ್ಮಿಸಲಾಗಿದೆ.
ವಾಹನ ಸಂಚಾರ ಹೆಚ್ಚಾಗಿರುವ ಈ ರಸ್ತೆಯಲ್ಲಿ ಸಂಚರಿಸುವುದೇ ಕಷ್ಟವಾಗಿತ್ತು. ಇದರಿಂದ ನಿತ್ಯ ಸಂಚರಿಸುವ ಸಹಸ್ರಾರು ಮಂದಿಗೆ ಅನುಕೂಲವಾಗಿದೆ ಎಂದರು.
ಆನೇಕಲ್ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸಿ.ನಾಗರಾಜು ಮಾತನಾಡಿ, ಆನೇಕಲ್ ತಾಲ್ಲೂಕಿನಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಆನೇಕಲ್ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಇನ್ನೂ ಹೆಚ್ಚಿನ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ ಎಂದರು.
ಮೆಳ್ಳೆನಹಳ್ಳಿಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಶಂಕರ್ರೆಡ್ಡಿ, ಉಮಾದೇವಿ, ಮಾಜಿ ಅಧ್ಯಕ್ಷ ಕೆ.ಸತ್ಯಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶಾಂತಮ್ಮ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಪ್ಪ, ಸದಸ್ಯರಾದ ಬಿ.ಭುವನೇಶ್ವರ್, ಗೌತಮ್, ಸುಧೀಂದ್ರ, ಲಕ್ಷ್ಮೀದೇವಿ, ಮಂಜುಳ, ವೆಂಕಟೇಶ್, ಆನಂದ್ ರೆಡ್ಡಿ, ರಾಜು, ಬಾಬು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಪ್ಪ ಹಾಜರಿದ್ದರು.
***
ನಮ್ಮಲ್ಲಿ ಲಭ್ಯವಿರುವ ಅನುದಾನದಲ್ಲಿ ಶಾಸಕರ ಜೊತೆ ಚರ್ಚಿಸಿ ಹೆಚ್ಚಿನ ಅನುದಾನವನ್ನು ಮೂಲಸೌಲಭ್ಯಗಳನ್ನು ಕಲ್ಪಿಸಲು ಬಿಡುಗಡೆ ಮಾಡಲಾಗುವದು
-ಸಿ. ನಾಗರಾಜು, ಅಧ್ಯಕ್ಷ, ಆನೇಕಲ್ ಅಭಿವೃದ್ಧಿ ಪ್ರಾಧಿಕಾರ