ಶಿಕಾರಿಪುರ: ‘ವಿದ್ಯಾರ್ಥಿಗಳನ್ನು ಶಿಕ್ಷಣಕ್ಕೆ ಮಾತ್ರ ಸೀಮಿತಗೊಳಿಸದೆ ದೇಶದ ವೈಚಾರಿಕತೆ, ಪರಂಪರೆ, ಸಂಸ್ಕೃತಿಯನ್ನು ಎತ್ತಿ ಹಿಡಿಯುವಂತಹ ಜೀವನ ಮೌಲ್ಯ
ಗಳನ್ನು ಕಲಿಸಬೇಕು’ ಎಂದು ಅಂಕಣಕಾರ ದು.ಗು.ಲಕ್ಷ್ಮಣ್ ಶಿಕ್ಷಕರಿಗೆ ಸಲಹೆ ನೀಡಿದರು.
ಪಟ್ಟಣದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಗುರುವಾರ ನಡೆದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ವಿದ್ಯಾರ್ಥಿಗಳು ತರ್ಕಬದ್ಧವಾಗಿ ಆಲೋಚನೆ ಮನೋಭಾವ ಬೆಳೆಸಿಕೊಳ್ಳಬೇಕು. ಕಲಿಕೆ ಹಾಗೂ ಕೆಲಸದಲ್ಲಿ ಕಠಿಣ ಶ್ರಮ ಮುಖ್ಯವಾಗಿರುತ್ತದೆ. ಪ್ರಸ್ತುತ ದಿನಗಳಲ್ಲಿ ಶ್ರಮದ ಕೊರತೆ ಎದ್ದು ಕಾಣುತ್ತಿದ್ದು, ಕಲಿಕೆಯಲ್ಲಿ ನಿರಾಸಕ್ತಿ ಮೂಡುತ್ತಿದೆ. ಇಂತಹ ಸಂದರ್ಭದಲ್ಲಿ ವಿವೇಕಾನಂದರ ಆತ್ಮವಿಶ್ವಾಸ ಹಾಗೂ ಏಕಾಗ್ರತೆ ತತ್ವವನ್ನು ಅಳವಡಿಸಿಕೊಳ್ಳುವ ಅಗತ್ಯತೆ ಇದೆ’ ಎಂದು ಸಲಹೆ ನೀಡಿದರು.
ಸ್ವಾಮಿ ವಿವೇಕಾನಂದರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸ್ವಾಮಿ ವಿವೇಕಾನಂದರ ವಾಣಿಗಳು ಸಿಡಿಲು ಬಡಿದಂತೆ ಇದ್ದು, ಇಂದಿನ ದಿನಗಳಲ್ಲಿ ವಾಣಿಗಳನ್ನು ಸಾಣೆ ಹಿಡಿಯುವ ಕಾರ್ಯ ಆಗಬೇಕು. ಆಗ ಮಾತ್ರ ನವಭಾರತ ನಿರ್ಮಾಣ ಹಾದಿ ಸುಗಮವಾಗಲು ಸಾಧ್ಯವಾಗುತ್ತದೆ’ ಎಂದರು.
ಶಾಸಕ ಬಿ.ವೈ.ರಾಘವೇಂದ್ರ ಮಾತನಾಡಿ, ‘ಇಂದು ಶಿಕ್ಷಣದ ಜತೆಗೆ ಜೀವನ ಕೌಶಲಗಳ ಬಗ್ಗೆ ತರಬೇತಿ ನಿಡುವುದು ಅವಶ್ಯಕವಾಗಿದೆ. ವಿದ್ಯಾರ್ಥಿ
ಗಳು ವಿವೇಕಾನಂದರ ಕೆಲವು ವಾಣಿಗಳನ್ನು ಅಳವಡಿಸಿಕೊಂಡರೆ ಮಾನಸಿಕ ಹಾಗೂ ಬೌದ್ಧಿಕವಾಗಿ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ. ಕಠಿಣ ಶ್ರಮ ಹಾಗೂ ಆತ್ಮವಿಶ್ವಾಸ ಹೊಂದಿದಾಗ ಜೀವನದಲ್ಲಿ ಸಾಧನೆ ಮಾಡಬಹುದು’ ಎಂದು ಸಲಹೆ ನೀಡಿದರು.
ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಖಜಾಂಚಿ ಬಿ.ವೈ. ವಿಜಯೇಂದ್ರ, ಸಮನ್ವಯ ಆಡಳಿತಾಧಿಕಾರಿ ಕುಬೇರಪ್ಪ, ಪ್ರಾಂಶುಪಾಲರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸಂಸ್ಥೆಯ ವಿವೇಕಾಂಜಲಿ ಸಂಚಿಕೆ ಬಿಡುಗಡೆ ಮಾಡಲಾಯಿತು.