ಮಂಡ್ಯ: ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ಧೋರಣೆಯನ್ನು ಬಿಟ್ಟು, ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಡಬೇಕು’ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಕೃಷ್ಣಮೂರ್ತಿ ಹೇಳಿದರು.
ನಗರದ ಜ್ಞಾನಸಿಂಧು ವೃದ್ಧಾಶ್ರಮದಲ್ಲಿ ಬಿಎಸ್ಪಿ ಜಿಲ್ಲಾ ಘಟಕ, ಪಕ್ಷದ ರಾಷ್ಟ್ರೀಯ ಘಟಕದ ಅಧ್ಯಕ್ಷೆ ಮಾಯಾವತಿ ಅವರ ಹುಟ್ಟುಹಬ್ಬದ ಅಂಗವಾಗಿ ಭಾನುವಾರ ನಡೆದ ‘ನೋಟು ರದ್ದತಿಯಿಂದ ಜನ ಸಾಮಾನ್ಯರಿಗೆ ಆರ್ಥಿಕ ಸಂಕಷ್ಟ’ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರೈತರು ಬರಸ್ಥಿತಿಯಿಂದ ಕಂಗಾಲಾಗಿದ್ದಾರೆ. ಬೆಳೆ ಪೂರ್ಣವಾಗಿ ಸಿಕ್ಕಿಲ್ಲ. ಇನ್ನು ಕೆಲ ಬೆಳೆಗಳು ಒಣಗಿವೆ. ಅವರಿಗೆ ಸೂಕ್ತ ಬೆಳೆ ಪರಿಹಾರ ನೀಡುವ ಮೂಲಕ ರೈತರ ರಕ್ಷಿಸುವ ಹೊಣೆಗಾರಿಕೆ ಕೇಂದ್ರ, ರಾಜ್ಯ ಸರ್ಕಾರದ ಮೇಲಿದೆ ಎಂದು ತಿಳಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ನೀತಿ ಅನುಸರಿಸುತ್ತಿವೆ. ಬರ ಪರಿಹಾರ ನೀಡಲು ಮೀನಮೇಷ ಎಣಿಸುತ್ತಿವೆ. ಕಟ್ಟ ಕಡೆಯ ರೈತನಿಗೂ ಬರ ಪರಿಹಾರ ಸಿಗುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಪ್ರಧಾನ ಮಂತ್ರಿ ನೋಟು ರದ್ದತಿ ಮೂಲಕ ರೈತರು ಹಾಗೂ ಜನಸಾಮಾನ್ಯರಿಗೆ ಆರ್ಥಿಕ ಸಂಕಷ್ಟ ಉಂಟುಮಾಡಿದ್ದಾರೆ ಎಂದು ಆರೋಪಿಸಿದರು.
ಜ್ಞಾನಸಿಂಧು ವೃದ್ಧಾಶ್ರಮದ ನಿವಾಸಿಗಳಿಗೆ ಹಣ್ಣುಗಳನ್ನು ನೀಡಲಾಯಿತು. ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದಯ್ಯ, ಆಟೋ ದಿನೇಶ್, ಸಿದ್ದಲಿಂಗ ಉಪಸ್ಥಿತರಿದ್ದರು.