ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ‘ರಾಷ್ಟ್ರೀಯ ವಿದ್ಯಾರ್ಥಿ ವೇತನ’ ವಿತರಣಾ ಸಮಾರಂಭ ಭಾನುವಾರ ನಗರದ ಕಂಕನಾಡಿಯ ಜಮೀಯ್ಯತುಲ್ ಫಲಾಹ್ ಸಭಾಂಗಣದಲ್ಲಿ ನಡೆಯಿತು.
ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿ ಶಾಸಕ ಜೆ.ಆರ್. ಲೋಬೊ ಅವರು ಮಾತನಾಡಿ, ವಿದ್ಯಾರ್ಜನೆ ಮಾಡುವಾಗ ನಮಗೆ ವಿದ್ಯಾರ್ಥಿ ವೇತನ ನೀಡಿ ಸಹಾಯ ಮಾಡಿದ ಕೈಗಳನ್ನು ಮರೆಯಬಾರದು. ನಾವು ಅದರ ಸದುಪಯೋಗ ಪಡೆದು ಇನ್ನೊಬ್ಬರಿಗೆ ಸಹಾಯ ಮಾಡುವ ಮೂಲಕ ಸರಪಳಿಯಾಗಿ ಮುಂದುವರಿಯಬೇಕು ಎಂದು ಹೇಳಿದರು.
ಈಚೆಗೆ ಹಣದ ಅಪಮೌಲೀಕರಣ ದಿಂದ ದಾನಿಗಳ ಸಂಖ್ಯೆ ಕಡಿಮೆಯಾಗಿದೆ. ಇಂತಹ ಸಂದರ್ಭದಲ್ಲಿ ಪಿಎಫ್ಐ ಸಂಘಟನೆಯ ಈ ಕಾರ್ಯ ಶ್ಲಾಘನೀಯ ಎಂದರು. ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ. ಗಫೂರ್ ಅವರು ಅಲ್ಪಸಂಖ್ಯಾತ ಸಮುದಾಯಕ್ಕೆ ಸರ್ಕಾರದ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕಾರ್ಪೊರೇಟರ್ ಅಯಾಝ್ ಅಹ್ಮದ್, ಪಿಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಹನೀಫ್ ಕಾಟಿಪಳ್ಳ, ಇಕ್ಬಾಲ್ ಕಾವೂರು ಮತ್ತಿತರರು ಇದ್ದರು, ಇಕ್ಬಾಲ್ ಜೋಕಟ್ಟೆ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯದಲ್ಲಿ ಬೆಂಗಳೂರು, ಮಂಗಳೂರು, ಶಿವಮೊಗ್ಗ, ಮೈಸೂರು ಹಾಗೂ ಗುಲ್ಬರ್ಗಾ ಮುಂತಾದ 5 ಕೇಂದ್ರಗಳಲ್ಲಿ ಉನ್ನತ ಶಿಕ್ಷಣಕ್ಕಾಗಿ ತೀರಾ ಹಿಂದುಳಿದ ಆಯ್ದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.