ಸಾಲಿಗ್ರಾಮ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜನರು ಪ್ರಾದೇಶಿಕ ಪಕ್ಷಗಳಿಗೆ ಸೇವೆ ಮಾಡುವ ಅವಕಾಶವನ್ನು ನೀಡಲಿದ್ದಾರೆ ಎಂದು ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಭವಿಷ್ಯ ನುಡಿದರು.
ಕೆ.ಆರ್.ನಗರ ತಾಲ್ಲೂಕಿನ ಚುಂಚನಕಟ್ಟೆ ಕೋದಂಡರಾಮನ ಬ್ರಹ್ಮರಥೋತ್ಸವದ ಅಂಗವಾಗಿ ಶಾಸಕ ಸಾ.ರಾ. ಮಹೇಶ್ ಆಯೋಜಿಸಿದ್ದ ದಾಸೋಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ಜನತೆ ರಾಷ್ಟ್ರೀಯ ಪಕ್ಷಗಳನ್ನು ಅಧಿಕಾರದಿಂದ ಕೆಳಕ್ಕೆ ಇಳಿಸುವ ಕಾಲ ದೂರವಿಲ್ಲ ಎಂದರು.
ಮುಂದಿನ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ನ ಕೆಲವು ನಾಯಕರು ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ ಗೊಳ್ಳುತ್ತಾರೆ. ಇದು ಮತ್ತೆ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಏರುವ ಸೂಚನೆ ಎಂದು ಭವಿಷ್ಯ ನುಡಿದರು.
ರಾಜ್ಯದ ಜನತೆ ಜೆಡಿಎಸ್ ಪಕ್ಷಕ್ಕೆ ಆಶೀರ್ವಾದ ಮಾಡಿದರೆ ರೈತರ ಸಾಲವನ್ನು ಮನ್ನಾ ಮಾಡಲಾಗುತ್ತದೆ ಎಂದು ಎಚ್.ಡಿ.ರೇವಣ್ಣ ಘೋಷಿಸಿದರು.
ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೋಮನಾಥ ಸ್ವಾಮೀಜಿ, ಶಿವಾನಂದಸ್ವಾಮೀಜಿ, ನಟರಾಜ ಸ್ವಾಮೀಜಿ, ಚಂದ್ರಶೇಖರ ಸ್ವಾಮೀಜಿ, ಶಾಸಕ ಸಾ.ರಾ.ಮಹೇಶ್, ಭವಾನಿ ರೇವಣ್ಣ, ಪ್ರಜ್ವಲ್ ರೇವಣ್ಣ, ಎ.ಟಿ.ಸೋಮಶೇಖರ್, ಜಿ.ಪಂ.ಸದಸ್ಯ ಡಿ.ರವಿಶಂಕರ್, ಸಿ.ಜೆ. ದ್ವಾರಕೀಶ್ ಉಪಸ್ಥಿತರಿದ್ದರು.