ದೇವನಹಳ್ಳಿ: ಇತ್ತೀಚೆಗೆ ನಡೆದ ಎಪಿಎಂಸಿ ಚುನಾವಣೆಯಲ್ಲಿ ಕಾರ್ಯ ಕರ್ತರ ಪರಿಶ್ರಮದ ಫಲದಿಂದಾಗಿ ಪಕ್ಷದ ಅಭ್ಯರ್ಥಿಗಳು ಗೆಲುವಿಗೆ ಕಾರಣರಾಗಿದ್ದಾರೆ ಎಂದು ಕಾಂಗ್ರೆಸ್ ಎಸ್ಸಿ ಘಟಕ ಜಿಲ್ಲಾಧ್ಯಕ್ಷ ಚಿನ್ನಪ್ಪ ತಿಳಿಸಿದರು.
ದೇವನಹಳ್ಳಿ ಪ್ರವಾಸಿ ಮಂದಿರದಲ್ಲಿ ಭಾನುವಾರ ತಾಲ್ಲೂಕು ಕಾಂಗ್ರೆಸ್ ಪಕ್ಷದ ವತಿಯಿಂದ ಎಪಿಎಂಸಿ ಚುನಾವಣೆಯಲ್ಲಿ ನಿರ್ದೇಶಕರಾಗಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ನಡೆದ ಅಭಿನಂದನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಬಹು ನಿರೀಕ್ಷಿತ ಕುಂದಾಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಸೋಲುಂಟಾಗಿರುವುದು ತುಂಬಾ ಬೇಸರ ಹಾಗೂ ನೋವುಂಟಾಗುವಂತದ್ದು, ಸ್ಥಳಿಯ ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಕಾರಣ ವಾಗಿರಬಹುದು ಎಂದರು.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಪಕ್ಷದ ಮುಖಂಡ ಚೇತನ್ಗೌಡ ಮಾತನಾಡಿ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಸಹಕಾರ ಸಂಘಗಳಲ್ಲಿ ಪಕ್ಷ ಬಹುಮತಗಳಿಸಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಿ.ಜಗನ್ನಾಥ್ ಮಾತನಾಡಿ, ಕುಂದಾಣ ಕ್ಷೇತ್ರ ವ್ಯಾಪ್ತಿಯಲ್ಲಿ ಪಕ್ಷದಲ್ಲಿರುವ ಕೆಲ ಮುಖಂಡರು ಪಕ್ಷವಿರೋಧಿ ಚಟುವಟಿಕೆ ನಡೆಸಿರುವ ಬಗ್ಗೆ ಮಾಹಿತಿ ಇದೆ. ಪಕ್ಷದ ಹಿರಿಯರು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಜಿ.ಪಂ.ಸದಸ್ಯ ಲಕ್ಷ್ಮಿನಾರಾಯಣ ಮಾಜಿ ಶಾಸಕ ವೆಂಕಟಸ್ವಾಮಿ, ಪುರಸಭೆ ಮಾಜಿ ಅಧ್ಯಕ್ಷ ಎಂ.ನಾರಾಯಣಸ್ವಾಮಿ, ತೂಬುಗೆರೆ ಎಸ್. ಆರ್.ಮುನಿರಾಜು. ಜಿ.ಪಂ. ಉಪಾಧ್ಯಕ್ಷೆ ಅನಂತಕುಮಾರಿ, ಜಿ.ಪಂ.ಸದಸ್ಯ ಕೆ.ಸಿ.ಮಂಜುನಾಥ್, ರಾಧಮ್ಮ ಮುನಿರಾಜು, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ ಅಧ್ಯಕ್ಷ ಸೊಮಣ್ಣ, ಪುರಸಭೆ ಸದಸ್ಯ ಜಿ.ಎನ್. ವೇಣುಗೋಪಾಲ್, ಎನ್.ರಘು, ಎಂ.ಮೂರ್ತಿ, ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷ ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಕೆಪಿಸಿಸಿ ಸದಸ್ಯ ಸಿ.ಕೆ.ರಾಮಚಂದ್ರಪ್ಪ, ದೇವನಹಳ್ಳಿ ಬ್ಲಾಕ್ ಅಧ್ಯಕ್ಷ ಮಾರುತಿ, ವಿಜಯಪುರ ಬ್ಲಾಕ್ ಅಧ್ಯಕ್ಷ ರಾಮಚಂದ್ರಪ್ಪ ಉಪಸ್ಥಿತರಿದ್ದರು.
ಇದೆ ಸಂದರ್ಭದಲ್ಲಿ ಚನ್ನ ರಾಯಪಟ್ಟಣ ಕ್ಷೇತ್ರ ಅಮರಾವತಿ, ವಿಜಯಪುರ ಕ್ಷೇತ್ರ ಸುಧಾಕರ್, ತೂಬುಗೆರೆ ಕ್ಷೇತ್ರ ಟಿ.ಆರ್. ವೆಂಕಟ ಲಕ್ಷ್ಮಮ್ಮ ಅವರನ್ನು ಅಭಿನಂದಿಸಲಾಯಿತು.