ಆನೇಕಲ್: ಭಾರತೀಯ ಪರಂಪರೆಯಲ್ಲಿ ಹಬ್ಬ ಹರಿದಿನಗಳು ಸಂಸ್ಕೃತಿಯ ಭಾಗವಾಗಿದ್ದು ವೈಜ್ಞಾನಿಕ ಹಿನ್ನೆಲೆಯನ್ನು ಹೊಂದಿವೆ. ಇವುಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸಿಕೊಡುವ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ಸಾಮೂಹಿಕ ಸಂಕ್ರಾಂತಿ ಉತ್ಸವ ಉತ್ತಮ ವೇದಿಕೆಯಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಅವರು ತಾಲ್ಲೂಕಿನ ಚಂದಾಪುರದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಆಯೋಜಿಸಿದ್ದ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಹಿಂದೂ ಹಬ್ಬಗಳಾದ ದೀಪಾವಳಿ, ಯುಗಾದಿ ಸೇರಿದಂತೆ ವಿವಿಧ ಹಬ್ಬಗಳ ಆಚರಣೆ ವಿಶೇಷತೆಯ ಬಗ್ಗೆ ಕುಟುಂಬಗಳಲ್ಲಿ ಮನವರಿಕೆ ಮಾಡಿಕೊಡುವ ಕಾರ್ಯವಾಗಬೇಕು ಎಂದರು.
ಮಾಜಿ ಸಚಿವ ಎ.ನಾರಾಯಣಸ್ವಾಮಿ ಮಾತನಾಡಿ, ಬರಗಾಲದ ಸಂದರ್ಭದಲ್ಲಿ ರೈತರು ಕುಡಿಯುವ ನೀರಿನ ಸಮಸ್ಯೆ, ಗೋಸಂರಕ್ಷಣೆ ಮತ್ತಿತರ ಸಮಸ್ಯೆಗಳಿಂದ ಪರದಾಡುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ರೈತರ ಬಗ್ಗೆ ಯಾವುದೇ ಕಾಳಜಿ ತೋರುತ್ತಿಲ್ಲ ಎಂದರು.
ಎತ್ತಿನ ಗಾಡಿಯಲ್ಲಿ: ತಾಲ್ಲೂಕು ಮಹಿಳಾ ಮೋರ್ಚಾ ವತಿಯಿಂದ ಆಯೋಜಿಸಿದ್ದ ಸಂಕ್ರಾಂತಿ ಸಂಭ್ರಮ ಅತ್ಯಂತ ವಿಶಿಷ್ಟವಾಗಿತ್ತು. ಅತಿಥಿಗಳನ್ನು ಎತ್ತಿನ ಗಾಡಿಯಲ್ಲಿ ಮೆರವಣಿಗೆಯಲ್ಲಿ ಸಮಾರಂಭ ಸ್ಥಳಕ್ಕೆ ಕರೆ ತರಲಾಯಿತು.
ಮೈದಾನದಲ್ಲಿ ರಂಗೋಲಿ, ಅವರೆಕಾಯಿ ಸುಲಿಯುವ ಸ್ಪರ್ಧೆ, ಮಡಿಕೆ ಒಡೆಯುವ ಸ್ಪರ್ಧೆ, ಕೋಲಾಟ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಬಂದಿದ್ದ ಕಾರ್ಯಕರ್ತರಿಗೆ ಕಬ್ಬು, ಕಡಲೆಕಾಯಿ, ಎಳ್ಳು ಬೆಲ್ಲ, ಗೆಣಸು ನೀಡುವ ವ್ಯವಸ್ಥೆ ಮಾಡಲಾಗಿತ್ತು.
ಬಂದಿದ್ದ ಬೃಹತ್ ಜನಸ್ತೋಮ ಸಂತಸದಿಂದ ಮಿಂದ್ದೆದಿತು. ಕಿಯೋನಿಕ್್ಸ ಮಾಜಿ ಅಧ್ಯಕ್ಷ ಎಂ.ಯಂಗಾರೆಡ್ಡಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಮುನಿರಾಜು, ಮಾಜಿ ಅಧ್ಯಕ್ಷ ಕೆ.ಸಿ.ರಾಮಚಂದ್ರ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೆ.ವಿ.ಶಿವಪ್ಪ, ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳ ನೀಲಕಂಠಯ್ಯ, ರೈತ ಮೋರ್ಚಾ ಅಧ್ಯಕ್ಷ ಶ್ರೀರಾಮ್, ವಿಜಯನಾರಾಯಣಸ್ವಾಮಿ, ಚಂದಾಪುರ ಪುರಸಭಾ ಅಧ್ಯಕ್ಷ ವೇಣುಗೋಪಾಲ್, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಟಿ.ನಾರಾಯಣ, ನಾಗೇಶ್ರೆಡ್ಡಿ, ಪವಿತ್ರಾ ಜಯಪ್ರಕಾಶ್, ಮಮತ ವಿಜಯಕೃಷ್ಣ, ಶೈಲಜಾ ಶ್ರೀನಿವಾಸ್ ಪ್ರಸಾದ್, ವಾತ್ಸಲ್ಯ ಲಕ್ಷ್ಮೀನಾರಾಯಣ್, ತಾ.ಪಂ. ಅಧ್ಯಕ್ಷೆ ಮುನಿರತ್ನಮ್ಮ ನಾರಾಯಣ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ವಿ.ಆಂಜಿನಪ್ಪ, ಹೆಬ್ಬಗೋಡಿ ನಗರಸಭಾ ಅಧ್ಯಕ್ಷೆ ಮತ್ತಿತರರಿದ್ದರು.
ಬಿಜೆಪಿಯಿಂದ ಗೋಶಾಲೆಗಳು
ರಾಜ್ಯದ 160 ತಾಲ್ಲೂಕುಗಳನ್ನು ಬರಗಾಲ ಪೀಡಿತ ಪ್ರದೇಶವೆಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಆದರೆ ಯಾವುದೇ ತಾಲ್ಲೂಕುಗಳಲ್ಲೂ ಬರ ಪರಿಹಾರ ಕಾರ್ಯಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಟೀಕಿಸಿದರು.
ಅವರು ತಾಲ್ಲೂಕಿನ ಚಂದಾಪುರದಲ್ಲಿ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಬಿಜೆಪಿಯ ಎಲ್ಲಾ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ತಲಾ ₹ 25 ಲಕ್ಷ ನೆರವು ನೀಡಿ ಗೋಶಾಲೆಗಳನ್ನು ಪ್ರಾರಂಭಿಸಲು ತೀರ್ಮಾನಿಸಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳು ಗೋಶಾಲೆ ಪ್ರಾರಂಭಿಸಿದರೆ ತಮ್ಮ ಅನುದಾನವನ್ನು ನೀಡಲಾಗುವುದು ಎಂದರು.
ರಾಜ್ಯ ಸರ್ಕಾರಕ್ಕೆ ಕಳೆದ ವರ್ಷ ₹ 1520 ಕೋಟಿ, ಈ ವರ್ಷ ₹ 1782 ಕೋಟಿ ಸೇರಿದಂತೆ ₹ 3302 ಕೋಟಿ ಅನುದಾನವನ್ನು ಬರ ಪರಿಹಾರ ಕಾರ್ಯಗಳಿಗಾಗಿ ಕೇಂದ್ರ ಸರ್ಕಾರ ನೀಡಿದೆ. ಆದರೆ ನೀಡಿದ ಹಣವನ್ನು ಸಮರ್ಥವಾಗಿ ಬಳಸಿಕೊಂಡಿಲ್ಲ ಎಂದು ಆರೋಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.