ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಶೇ 95 ರಷ್ಟು ಲೋಕೋಪಯೋಗಿ ರಸ್ತೆಗಳ ಡಾಂಬರೀಕರಣ ಕೆಲಸ ಮುಕ್ತಾಯ ವಾಗಿದ್ದು ಬಾಕಿ ಉಳಿದಿರುವ ರಸ್ತೆಗಳ ಕಾಮಗಾರಿ ಮುಂದಿನ ಆರ್ಥಿಕ ವರ್ಷದಲ್ಲಿ ಮುಕ್ತಾಯವಾಗಲಿವೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.
ಅವರು ತಾಲ್ಲೂಕಿನ ತಿಪ್ಪೂರು ಗ್ರಾಮದಿಂದ ಮೇಸ್ಟ್ರು ಮನೆ ಕ್ರಾಸ್ವರೆಗಿನ ₹ 4.5 ಕೋಟಿ ವೆಚ್ಚದ ರಸ್ತೆ ಡಾಂಬರೀಕರಣಕ್ಕೆ ಚಾಲನೆ ನೀಡಿ ಮಾತನಾಡಿದರು.
ತಾಲ್ಲೂಕಿನ ಬಹುತೇಕ ಗ್ರಾಮೀಣ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಲಾಗಿದೆ. ಗ್ರಾಮಗಳಿಗೆ ಉತ್ತಮ ಸರ್ವ ಋತು ರಸ್ತೆ ಸಂಪರ್ಕ ಕಲ್ಪಿಸುವುದರಿಂದ ಕೃಷಿ ಸೇರಿದಂತೆ ಎಲ್ಲ ರೀತಿಯ ಪ್ರಗತಿಗೂ ಉಪಯುಕ್ತವಾಗಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಉದ್ಯೋಗ ಖಾರಿ ಯೋಜನೆಯಲ್ಲೂ ರಸ್ತೆಗಳ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಈ ವರ್ಷ ತಾಲ್ಲೂಕಿನಲ್ಲಿ ಬರಗಾಲ ಇರುವುದರಿಂದ ಕೂಲಿ ಕಾರ್ಮಿಕರು ತೊಂದರೆಗೆ ಸಿಲುಕದಂತೆ ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆಗಳ ವತಿಯಿಂದ ಉದ್ಯೋಗ ಖಾತರಿ ಯೋಜನೆಯಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಕಾರ್ಮಿಕರು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕದಂತೆ ಎಚ್ಚರ ವಹಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಬೇಸಿಗೆಯಲ್ಲೂ ಸಹ ಯಾರೂ ಕೆಲಸ ಇಲ್ಲದೆ ಬರಿಗೈಯಲ್ಲಿ ಇರುವಂತಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ ಮತ್ತಿತರ ಮುಖಂಡರು ಹಾಜರಿದ್ದರು.