ಗಂಗಾವತಿ: ನೀರಿನ ಪ್ರಮಾಣ ಕಡಿಮೆಯಾಗಿದ್ದರಿಂದ ಮುಂಬರುವ ಬೇಸಿಗೆಯ ದಿನಗಳಲ್ಲಿ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಲಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕೋಬಪ್ಪ ಆತಂಕ ವ್ಯಕ್ತಪಡಿಸಿದರು.
ಬರಗಾಲ ನಿರ್ವಹಣೆಯ ಸಂಬಂಧ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಎಲ್ಲಾ ಗ್ರಾಮ ಪಂಚಾಯಿತಿ ಪಿಡಿಓಗಳ ಜೊತೆ ಮಂಗಳವಾರ ತುರ್ತು ಸಭೆ ನಡೆಸಿದ ಕಾರ್ಯನಿರ್ವಾಹಕ ಅಧಿಕಾರಿ , ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಬರಗಾಲ ನಿರ್ವಹಣೆಗೆ ₹60 ಲಕ್ಷ ಅನುದಾನ ಮಂಜೂರಾಗಿದೆ. ಪ್ರತಿ ಗ್ರಾಮಗಳಲ್ಲೂ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗಬಾರದು. ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದೆ. ನಿರ್ಲಕ್ಷಿಸದೇ ತಕ್ಷಣ ಕ್ರಮ ಕೈಗೊಳ್ಳಬೇಕು. ಜನ ದೂರವಾಣಿ ಕರೆ ಮಾಡಿದಾಗ ಸ್ಪಂದಿಸದಿದ್ದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದರು.
ಕರಡೋಣಾ ಗ್ರಾಮದಲ್ಲಿನ ಸಮಸ್ಯೆ ಪರಿಹರಿಸಿ ಕೆರೆಯಲ್ಲಿ ಕಾಮಗಾರಿ ಕೈಗೊಳ್ಳಲು ಕಾರ್ಮಿಕರಿಗೆ ಕೆಲಸ ಹಂಚಿಕೆ ಮಾಡಲಾಗಿದೆ. ಅದರಂತೆ ಚಿಕ್ಕ ಜಂತಕಲ್ ವ್ಯಾಪ್ತಿಯ ಕೆರೆಯಲ್ಲಿ ಕೆಲಸ ನೀಡಲಾಗಿದೆ ಎಂದು ತಿಳಿಸಿದರು.
ತಾಂತ್ರಿಕ ಸಮಸ್ಯೆಗಳ ಕುರಿತಾಗಿ ಹುಲಿಹೈದರ ಪಿಡಿಒ ರಾಮಾ ನಾಯ್ಕ್, ಹೇರೂರು ಪಿಡಿಒ ಸಿದ್ಧನಗೌಡ ಮಾತನಾಡಿದರು. ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಜಂಬಣ್ಣ ಐಲಿ, ತಾ.ಪಂ ಸಹಾಯಕ ನಿರ್ದೇಶಕ ತಿಮ್ಮಾ ನಾಯ್ಕ್ ಇದ್ದರು.