ಬೆಂಗಳೂರು: ಭಾರತೀಯ ಶಿಶುವೈದ್ಯ ಸಂಘವು ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿರುವ ‘ಪೆಡಿಕಾನ್ ಬೆಂಗಳೂರು 2017’ ಸಮಾವೇಶಕ್ಕೆ ಗುರುವಾರ ಚಾಲನೆ ನೀಡಲಾಯಿತು.
ದೇಶ ಮತ್ತು ವಿದೇಶದ ಶಿಶು ವೈದ್ಯಕೀಯ ಕ್ಷೇತ್ರದಲ್ಲಿ ಇತ್ತೀಚೆಗೆ ಆದಂತಹ ಪರಿಣಾಮಕಾರಿಯಾದ ಬೆಳವಣಿಗೆಗಳು ಮತ್ತು ಹೊಸ ಹೊಸ ಆವಿಷ್ಕಾರಗಳ ಕುರಿತು ಸಮಾವೇಶದಲ್ಲಿ ಚರ್ಚೆ ನಡೆಸಲಾಗುತ್ತದೆ.
ಕಾರ್ಯಕ್ರಮದಲ್ಲಿ ಸುಮಾರು 8500 ಶಿಶುತಜ್ಞರು ಭಾಗವಹಿಸಿದ್ದಾರೆ. ತಾಂತ್ರಿಕ ಮಾಹಿತಿ ಹಂಚಿಕೊಳ್ಳಲು ಕಾರ್ಯಾಗಾರ ಮತ್ತು ತರಬೇತಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ಅವರು, ಜಯದೇವ ಆಸ್ಪತ್ರೆಯು ಶಿಶುಗಳಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುತ್ತಿದೆ. ಅಂತಹ ಸೌಲಭ್ಯ ರಾಜ್ಯದ ಎಲ್ಲ ಭಾಗಗಳಲ್ಲಿ ಸಿಗಬೇಕಿದೆ ಎಂದರು. ಈ ಕ್ಷೇತ್ರಕ್ಕೆ ಅಗತ್ಯವಾದ ಅನುಕೂಲತೆಗಳನ್ನು ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಅವರು ಹೇಳಿದರು.