ಬೆಂಗಳೂರು: ವಿಮಾನದ ಮೂಲಕ ಒಂಟೆ ಹಲ್ಲು ಹಾಗೂ ಹಸುವಿನ ಚರ್ಮ ಸಾಗಾಟ ಮಾಡುತ್ತಿದ್ದ ಐವರನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
‘ಬಂಧಿತರೆಲ್ಲರೂ ಹಲವು ವರ್ಷಗಳಿಂದ ಜಾನುವಾರು ಉತ್ಪನ್ನಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು ಎಂಬುದು ಗೊತ್ತಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಆರೋಪಿಗಳ ಹೆಸರುಗಳನ್ನು ಗೋಪ್ಯವಾಗಿರಿಸಿದ್ದೇವೆ’ ಎಂದು ಕಸ್ಟಮ್ಸ್ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.
‘ಬ್ಯಾಂಕಾಂಕ್ನ ಥೈ ಏರ್ಲೈನ್ಸ್ನ ಟಿ.ಜಿ–326 ವಿಮಾನದಲ್ಲಿ ನಿಲ್ದಾಣಕ್ಕೆ ಬಂದಿದ್ದ ಆರೋಪಿಗಳನ್ನು ತಪಾಸಣೆಗೆ ಒಳಪಡಿಸಲಾಯಿತು. ಈ ವೇಳೆ ಅವರ ಬಳಿ ಒಂಟಿಗಳ 4 ಸಾವಿರ ಹಲ್ಲುಗಳು ಹಾಗೂ 130 ಹಸುಗಳ ಚರ್ಮ ಸಿಕ್ಕಿತು. ಅವುಗಳನ್ನು ಜಪ್ತಿ ಮಾಡಲಾಗಿದ್ದು, ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ’ ಎಂದು ಹೇಳಿದರು.
‘ವಿಮಾನ ಮೂಲಕವೇ ಇವುಗಳನ್ನು ತರುತ್ತಿದ್ದ ಆರೋಪಿಗಳು, ಬೆಂಗಳೂರು, ಚೆನ್ನೈ ಸೇರಿದಂತೆ ಹಲವು ನಗರಗಳ ಉದ್ಯಮಿಗಳು ಹಾಗೂ ಗಣ್ಯ ವ್ಯಕ್ತಿಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.ಕೆಲ ವ್ಯಕ್ತಿಗಳನ್ನು ವಿಚಾರಣೆಗೆ ಒಳಪಡಿಸಬೇಕಿದ್ದು, ಅದಾದ ಬಳಿಕ ಈ ಜಾಲದ ಬಗ್ಗೆ ಮತ್ತಷ್ಟು ಮಾಹಿತಿ ಸಿಗಲಿದೆ’ ಎಂದು ಅಧಿಕಾರಿ ವಿವರಿಸಿದರು.