ಬೆಂಗಳೂರು: ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮ ನೀಡುವ ಅತ್ಯುತ್ತಮ ಕಾರ್ಯಕ್ಷಮತಾ ಪ್ರಶಸ್ತಿಗೆ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಭಾಜನವಾಗಿದೆ ಎಂದು ನಿಗಮದ ಅಧ್ಯಕ್ಷ ಜೆ. ಹುಚ್ಚಪ್ಪ ತಿಳಿಸಿದರು.
ಸರ್ಕಾರ ಘೋಷಿಸಿದ ಯೋಜನೆಗಳನ್ನು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಮಾಡಿದ ಕಾರಣಕ್ಕೆ ನಿಗಮವು ಈ ಪ್ರಶಸ್ತಿಗೆ ಅರ್ಹವಾಗಿದೆ ಎಂದು ಅವರು ಮಾಧ್ಯಮಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.
2016-17ನೇ ಸಾಲಿನಲ್ಲಿ ರಾಜ್ಯ ಸರ್ಕಾರ ನೀಡಿದ ₹ 323 ಕೋಟಿ ಅನುದಾನದಲ್ಲಿ ಈಗಾಗಲೇ 50,037 ಫಲಾನುಭವಿಗಳಿಗೆ ಸ್ವಯಂ ಉದ್ಯೋಗ ಹಾಗೂ ಸಾಂಪ್ರದಾಯಿಕ ವೃತ್ತಿ ನಿರ್ವಹಿಸಲು ಸಾಲ ಸೌಲಭ್ಯ ಒದಗಿಸಲಾಗಿದೆ. ಮುಂದಿನ ಬಜೆಟ್ನಲ್ಲಿ ಹೆಚ್ಚಿನ ಅನುದಾನ ನೀಡುವಂತೆ ಒತ್ತಾಯಿಸಲಾಗುವುದು ಎಂದೂ ಅವರು ಹೇಳಿದರು.
ಕಡುಬಡವರಿಗೆ ನಿತ್ಯಜ್ಯೋತಿ ಯೋಜನೆಯಡಿ ಸೋಲಾರ್ ವಿದ್ಯುತ್ ಸಂಪರ್ಕ ಕಲ್ಪಿಸುವುದು, ವಿಧವೆಯರು ಸ್ವಯಂ ಉದ್ಯೋಗ ಕೈಕೊಳ್ಳಲು ₹ 50 ಸಾವಿರದವರೆಗೆ ಸಾಲ ಸೌಲಭ್ಯ ಯೋಜನೆ ಸೇರಿದಂತೆ ಪ್ರಮುಖ ಯೋಜನೆಗಳನ್ನು ಬಜೆಟ್ನಲ್ಲಿ ಅಳವಡಿಸುವಂತೆ ಮುಖ್ಯಮಂತ್ರಿಯನ್ನುಆಗ್ರಹಿಸಲಾಗುವುದು ಎಂದೂ ಅವರು ತಿಳಿಸಿದರು.