ಲಖನೌ : ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಎದುರಿಸಲು ಸಮಾಜವಾದಿ ಪಕ್ಷದ ಅಧ್ಯಕ್ಷ ಮತ್ತು ರಾಜ್ಯದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಭಾನುವಾರ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಆದರೆ ಮುಲಾಯಂ ಸಿಂಗ್ ಯಾದವ್ ಮತ್ತು ಶಿವಪಾಲ್ ಯಾದವ್ ಅವರು ಆ ಕಾರ್ಯಕ್ರಮದಿಂದ ದೂರ ಉಳಿದಿದ್ದರು.
ಅಖಿಲೇಶ್ ಅವರು, ‘ಕಾಮ್ ಬೋಲ್ತಾ ಹೆ’ (ಕೆಲಸವೇ ಮಾತನಾಡುತ್ತದೆ) ಎಂಬ ಘೋಷಣೆಯ ಮೂಲಕ ಚುನಾವಣೆಯನ್ನು ಎದುರಿಸುತ್ತೇವೆ. ಕಳೆದ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಸರ್ಕಾರ ಪೂರೈಸಿದೆ. ಆ ಸಾಧನೆಗಳನ್ನು ಮುಂದಿಟ್ಟುಕೊಂಡು ಜನರಲ್ಲಿ ಮತ ಕೇಳುತ್ತೇವೆ ಎಂದು ಹೇಳಿದ್ದಾರೆ. ಜತೆಗೆ ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೆ ತರುವುದಾಗಿ ಘೋಷಿಸಿದ್ದಾರೆ.
‘ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್, ಗೃಹಿಣಿಯರಿಗೆ ಕುಕ್ಕರ್, ವಿಧ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ, ರೈತರಿಗೆ ನೆರವಾಗಲು ಕಿಸಾನ್ ಕೋಶ ಸ್ಥಾಪಿಸುತ್ತೇವೆ’ ಎಂದು ಹೇಳಿದ್ದಾರೆ.
ಅಖಿಲೇಶ್ ಮತ್ತವರ ಪತ್ನಿ ಡಿಂಪಲ್ ಯಾದವ್ ಅವರಿದ್ದ ಕಾರ್ಯಕ್ರಮಕ್ಕೆ ಪಕ್ಷದ ಸಂಸ್ಥಾಪಕ ಮುಲಾಯಂ ಮತ್ತು ಶಿವಪಾಲ್ ಯಾದವ್ ಗೈರುಹಾಜರಾಗಿದ್ದರು. ಅವರಿಬ್ಬರನ್ನು ಕಾರ್ಯಕ್ರಮಕ್ಕೆ ಕರೆತರಲು ಪಕ್ಷದ ಹಿರಿಯ ನಾಯಕ ಅಜಂ ಖಾನ್ ಪ್ರಯತ್ನಿಸಿದರಾದರೂ, ಅದರಲ್ಲಿ ವಿಫಲರಾದರು ಎಂದು ಮೂಲಗಳು ತಿಳಿಸಿವೆ.