ಉಡುಪಿ: ಆರೋಗ್ಯ ಸಮಸ್ಯೆಗಳು ಬಂದಾಗ ಮಾತ್ರ ವೈದ್ಯರ ಬಳಿ ಹೋಗದೆ, ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಅಭ್ಯಾಸ ಬೆಳೆಸಿಕೊಳ್ಳಿ. ಭವಿಷ್ಯದಲ್ಲಿ ಬರುವ ಕಾಯಿಲೆಗಳನ್ನು ತಡೆಗಟ್ಟಲು ಇದು ಸಹಕಾರಿಯಾಗುತ್ತದೆ ಎಂದು ಉಡುಪಿಯ ಆದರ್ಶ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ ಡಾ. ಜಿ.ಎಸ್. ಚಂದ್ರಶೇಖರ್ ಹೇಳಿದರು.
ಆದರ್ಶ ಆಸ್ಪತ್ರೆ ಹಾಗೂ ಪ್ರಸಾದ್ ನೇತ್ರಾಲಯದ ಸಹಯೋಗದಲ್ಲಿ ನೇತ್ರಜ್ಯೋತಿ ಚಾರಿಟಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಧತ್ವ ನಿವಾರಣಾ ವಿಭಾಗ, ಉಡುಪಿ ಹಾಗೂ ಲಯನ್, ಲಯನೆಸ್ ಹಾಗೂ ಲಿಯೋ ಕ್ಲಬ್ ಉಡುಪಿ ಇಂದ್ರಾಳಿ, ರೋಟರಿ ಮಲ್ಪೆ ಕೊಡವೂರು, ಜೆಸಿಐ ಮಣಿಪಾಲ ಹಿಲ್ಸಿಟಿ, ವೆಸ್ಟರ್ನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಶ್ರೀ ಶಂಕರನಾರಾಯಣ ದೇವಸ್ಥಾನದ ಭಕ್ತವೃಂದ, ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆ ಮಲ್ಪೆ, ಸೌತ್ ಕೆನರಾ ಫೊಟೋಗ್ರಾಫರ್ಸ್ ಅಸೋಸಿಯೇಶನ್ ಅವರ ಸಂಯುಕ್ತ ಆಶ್ರಯದಲ್ಲಿ ಮಲ್ಪೆಯ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾನುವಾರ ಏರ್ಪಡಿಸಿದ್ದ ಉಚಿತ ವೈದ್ಯಕೀಯ ಹಾಗೂ ನೇತ್ರ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಹಿರಿಯ ನರರೋಗ ಶಸ್ತ್ರಚಿಕಿತ್ಸಾ ತಜ್ಞ ಪ್ರೊ. ಎ. ರಾಜಾ ಆರೋಗ್ಯ ಮೇಳವನ್ನು ಉದ್ಘಾಟಿಸಿದರು. ಜೆಸಿಐ ಅಧ್ಯಕ್ಷ ಸುಭಾಷ್ ಬಂಗೇರ ಪ್ರಾಸ್ತವಿಕವಾಗಿ ಮಾತನಾಡಿದರು. ಜೆಸಿಐ ಅಧ್ಯಕ್ಷ ಸುಭಾಸ್ ಬಂಗೇರ ಪ್ರಸ್ತಾಪಿಸಿದರು.
ಪ್ರಸಾದ್ ನೇತ್ರಾಲಯದ ಡಾ. ಅಕ್ಷತ್, ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞ ಡಾ. ಉರಾಳ್, ಎಲುಬು ಹಾಗೂ ಕೀಲುರೋಗ ತಜ್ಞ ಡಾ. ಮೋಹನದಾಸ್ ಶೆಟ್ಟಿ, ರೋಟರಿ ಅಧ್ಯಕ್ಷ ಪ್ರಭಾತ್ ಕುಮಾರ್. ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ದಿನೇಶ್ ಜಿ. ಸುವರ್ಣ, ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ನ ಅಧ್ಯಕ್ಷ ವಾಮನ ಪಡುಕೆರೆ ಉಪಸ್ಥಿತರಿದ್ದರು. ಲಯನ್ಸ್ ಅಧ್ಯಕ್ಷ ಮಹಮ್ಮದ್ ಮೌಲಾ ಸ್ವಾಗತಿಸಿದರು. ಜನಾರ್ದನ್ ಕೊಡವೂರು ನಿರೂಪಿಸಿದರು.