ಬೆಳಗಾವಿ: ಪರಿಶಿಷ್ಟ ಜಾತಿ/ಪಂಗಡಗಳ ಕಲ್ಯಾಣಕ್ಕಾಗಿ ಸರ್ಕಾರ ರೂಪಿಸಿರುವ ವಿಶೇಷ ಘಟಕ ಯೋಜನೆ/ಗಿರಿಜನ ಉಪ ಯೋಜನೆ ಕಾಯ್ದೆಯಡಿ ಸಮರ್ಪಕವಾಗಿ ಕಾರ್ಯಕ್ರಮಗಳನ್ನು ರೂಪಿಸದ ಹಾಗೂ ಅನುಷ್ಠಾನಗೊಳಿಸದ ಅಧಿಕಾರಿಗಳಿಗೆ ಶಿಕ್ಷೆ ಕಾದಿದೆ ಎಂದು ಪರಿಶಿಷ್ಟ ಜಾತಿ/ ಪಂಗಡಗಳ ವಿಧಾನಮಂಡಳದ ಶಾಸನ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಕೆ.ಶಿವಮೂರ್ತಿ ಎಚ್ಚರಿಕೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಸಭಾಂಗಣ ದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಈ ಕಾಯ್ದೆ ಯನ್ನು ರೂಪಿಸಿ ಎರಡು ವರ್ಷ ಕಳೆದಿದೆ. ಶೀಘ್ರದಲ್ಲಿ ಕಾರ್ಯಕ್ರಮಗಳ ಅನು ಷ್ಠಾನದ ಕುರಿತು ಆಡಿಟ್ ನಡೆಸ ಲಾಗುವುದು. ಇದರಲ್ಲಿ ಕರ್ತವ್ಯಲೋಪ ಎಸಗಿದ ಅಧಿಕಾರಿಗಳು ಪತ್ತೆಯಾಗ ಲಿದ್ದು, ಇವರ ವಿರುದ್ಧ ಅತ್ಯಂತ ಕಠಿಣ ಕ್ರಮಕೈಗೊಳ್ಳಲಾಗುವುದು. ಇಂತಹ ಅಧಿಕಾರಿಗಳನ್ನು ಜೈಲಿಗೆ ಕಳುಹಿಸಲು ಈ ಕಾಯ್ದೆಯಲ್ಲಿ ಅವಕಾಶವಿದೆ’ ಎಂದರು.
ಪರಿಶಿಷ್ಟರ ಅಭಿವೃದ್ಧಿಗಾಗಿ ಇಂತಹ ಕಠಿಣ ಕಾಯ್ದೆಯನ್ನು ಜಾರಿಗೆ ತಂದ ಎರಡನೇ ರಾಜ್ಯ ನಮ್ಮದು. ಇದಕ್ಕಿಂತ ಮೊದಲು ಆಂಧ್ರಪ್ರದೇಶದಲ್ಲಿ ಇಂತಹ ದೊಂದು ಕಾಯ್ದೆ ರಚನೆಯಾಗಿದೆ ಎಂದು ಹೇಳಿದರು.
ಈ ಕಾಯ್ದೆಯಡಿ ಪರಿಶಿಷ್ಟರ ಅಭಿವೃದ್ಧಿಗಾಗಿ 19 ಸಾವಿರ ಕೋಟಿ ರೂಪಾಯಿ ಅನುದಾನ ಮೀಸಲು ಇಡಲಾಗಿದೆ. ಈ ಅನುದಾನದ ಸದ್ಬಳಕೆ ಯಾಗಬೇಕು ಎನ್ನುವುದು ಸರ್ಕಾರದ ಆಶಯ ಎಂದರು.
ವರದಿ ಸಲ್ಲಿಕೆಗೆ ಸೂಚನೆ: ಬೆಳಗಾವಿಯ ಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯ ಹಾಗೂ ರಾಣಿಚನ್ನಮ್ಮ ವಿಶ್ವವಿದ್ಯಾಲಯವನ್ನು ಉಲ್ಲೇಖಿಸಿ ಮಾತನಾಡಿದ ಅವರು, ‘ಒಂದು ವೇಳೆ ವಿಶ್ವವಿದ್ಯಾಲಯಗಳು ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಾದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡದಿದ್ದರೆ ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚರ್ಚಿಸಿ ಅನುದಾನ ನಿಲ್ಲಿಸುವ ಬಗ್ಗೆಯೂ ಯೋಚಿಸಬಹುದು’ ಎಂದು ಹೇಳಿದರು.
ಇದಕ್ಕೆ ಉತ್ತರಿಸಿದ ಸಮಾಜಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಡಾ.ಉಮಾ ಸಾಲಿಗೌಡರ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಈಗಾಗಲೇ ಕ್ರಿಯಾ ಯೋಜನೆ ರೂಪಿಸಿದ್ದು, ಅದಕ್ಕೆ ಅನುಮೋದನೆ ಕೂಡ ನೀಡಲಾಗಿದೆ ಎಂದರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಜತೆ ಚರ್ಚೆ ನಡೆಸಲಾಗಿದೆ ಎಂದು ಸಭೆಯಲ್ಲಿ ತಿಳಿಸಿದರು.
ಕಾನೂನಿಗೆ ತಿದ್ದುಪಡಿ: ಮೂಲ ನಿವಾಸಿಗಳು, ಅರಣ್ಯವಾಸಿಗಳು ವಾಸವಿರುವ ಹಾಡಿಗಳನ್ನು ಕಂದಾಯ ಗ್ರಾಮಗಳೆಂದು ಪರಿಗಣಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ. ಮುಂದಿನ ವಿಧಾನ ಮಂಡಲದ ಅಧಿವೇಶನದಲ್ಲಿ ಜಾರಿಯಾಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.
ಹಾಡಿಗಳನ್ನು ಕಂದಾಯ ಗ್ರಾಮಗಳೆಂದು ಪರಿಗಣಿಸಿದರೆ ಮೂಲಸೌಕರ್ಯ ನೀಡಲು ಸಹಕಾರಿ ಯಾಗಲಿದೆ. ಅರಣ್ಯವಾಸಿಗಳು ಬಯಸಿ ದರೆ ಮಾತ್ರ ಪುನರ್ವಸತಿ ನೀಡ ಲಾಗುವುದು. ಯಾವುದೇ ರೀತಿಯಲ್ಲಿ ಬಲವಂತವಾಗಿ ಒಕ್ಕಲೆಬ್ಬಿಸುವುದಿಲ್ಲ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.