ಮಾನ್ವಿ: ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಆಯ್ಕೆ ಸೇರಿದಂತೆ ಪ್ರಮುಖ ನಿರ್ಧಾರಗಳ ಕುರಿತು ಅಧಿಕಾರಿಗಳು ತಮಗೆ ಮಾಹಿತಿ ನೀಡದೆ ತೀರ್ಮಾನ ಕೈಗೊಳ್ಳುತ್ತಿರುವ ಕುರಿತು ಶಾಸಕ ಜಿ.ಹಂಪಯ್ಯ ನಾಯಕ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಸೋಮವಾರ ನಡೆಯಿತು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಮಧ್ಯವರ್ತಿಗಳ ಸಲಹೆಯಂತೆ ನಡೆದುಕೊಳ್ಳುತ್ತಿರುವುದು ತಮ್ಮ ಗಮನಕ್ಕೆ ಬಂದಿದ್ದು ಈ ಧೋರಣೆಯನ್ನು ಅಧಿಕಾರಿಗಳು ಬದಲಿಸಿಕೊಳ್ಳಬೇಕು. ಯೋಜನೆಗಳು ಮತ್ತು ಸವಲತ್ತುಗಳ ಕುರಿತು ಜನಪ್ರತಿನಿಧಿಗಳಿಗೆ ಸಂಪೂರ್ಣ ಮತ್ತು ಸ್ಪಷ್ಟ ಮಾಹಿತಿ ನೀಡಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯನಿರ್ವಹಣೆಗೆ ಅಧಿಕಾರಿಗಳು ಹೆಚ್ಚು ಗಮನ ನೀಡಬೇಕು. ಜನತೆಗೆ ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ಬೇಜವಾಬ್ದಾರಿತನ ತೋರಬಾರದು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಎಇಇ ನರಸಿಂಗಪ್ಪ ಮಾತನಾಡಿ, ತಾಲ್ಲೂಕಿನಲ್ಲಿರುವ ಒಟ್ಟು 34 ಶುದ್ಧ ನೀರಿನ ಘಟಕಗಳ ಪೈಕಿ 17 ಕಾರ್ಯನಿರ್ವಹಿಸುತ್ತಿವೆ. ಉಳಿದ ಘಟಕಗಳನ್ನು ದುರಸ್ತಿಗೊಳಿಸಿ ಎಲ್ಲಾ ಶುದ್ಧ ನೀರಿನ ಘಟಕಗಳ ನಿರ್ವಹಣೆಯ ಜವಾಬ್ದಾರಿಯನ್ನು ಸ್ಥಳೀಯ ಸಂಘ ಸಂಸ್ಥೆಗಳಿಗೆ ವಹಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಮಹಾಂತೇಶ ಪಾಟೀಲ್ ಮಾತನಾಡಿ, ಸಭೆಗೆ ಒಂದು ವಾರದ ಮೊದಲು ಇಲಾಖೆಗಳ ಪ್ರಗತಿ ವರದಿಯನ್ನು ಸದಸ್ಯರಿಗೆ ನೀಡಬೇಕು ಎಂದರು.
ಸಹಾಯಕ ಕೃಷಿ ನಿರ್ದೇಶಕ ಮಾತನಾಡಿ, ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಒಟ್ಟು 19,550 ಅರ್ಜಿಗಳು ಸಲ್ಲಿಕೆಯಾಗಿವೆ. ಆತ್ಮಹತ್ಯೆ ಮಾಡಿಕೊಂಡಿರುವ ರೈತ ಕುಟುಂಬಗಳ ನೆರವಿಗಾಗಿ ₹56 ಲಕ್ಷ ಪರಿಹಾರ ಧನ ಬಿಡುಗಡೆಯಾಗಿದೆ ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶರಣಮ್ಮ ಮುದಿಗೌಡ, ಉಪಾಧ್ಯಕ್ಷ ಮಲ್ಲನಗೌಡ ಖರಾಬದಿನ್ನಿ, ಕಾರ್ಯನಿರ್ವಾಹಕ ಅಧಿಕಾರಿ ಶರಣಬಸವ, ಜಿಲ್ಲಾ ಪಂಚಾಯಿತಿ ಸದಸ್ಯ ಕಿರಿಲಿಂಗಪ್ಪ, ವೆಂಕಟೇಶ ಹೀರಾ, ಎಂ.ಮಲ್ಲಿಕಾರ್ಜುನ ಪೋತ್ನಾಳ ಮತ್ತು ಸೈಯದ್ ಹಾಜಿ ಸಾಬ ಕುರ್ಡಿ ಇದ್ದರು.