ಆನೇಕಲ್: ‘ದೇಶ ಭಕ್ತಿ ಕೇವಲ ರಾಷ್ಟ್ರೀಯ ಹಬ್ಬಗಳಿಗೆ ಮೀಸಲಾಗದೇ ಜೀವನದ ಭಾಗವಾಗಬೇಕು. ಸ್ವಾತಂತ್ರ್ಯ ಹೋರಾಟಗಾರರು, ದೇಶಭಕ್ತರ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಶಾಸಕ ಬಿ.ಶಿವಣ್ಣ ನುಡಿದರು.
ಪಟ್ಟಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ 68ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಆನೇಕಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೂಲಸೌಲಭ್ಯ, ಶಿಕ್ಷಣ ಹಾಗೂ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗಿದೆ. ರಸ್ತೆಗಳ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು ಈ ದಿಸೆಯಲ್ಲಿ ಆನೇಕಲ್–ಚಂದಾಪುರ, ಆನೇಕಲ್–ಇಂಡ್ಲವಾಡಿ, ಆನೇಕಲ್–ಸೋಲೂರು ರಸ್ತೆಗಳ ಅಭಿವೃದ್ದಿ ಪಡಿಸಲಾಗಿದ್ದು ಮುಂದಿನ ದಿನಗಳಲ್ಲಿ ಎಲ್ಲಾ ರಸ್ತೆಗಳನ್ನು ಸುಂದರ ರಸ್ತೆಗಳನ್ನಾಗಿ ಮಾಡಿ ಜನರು ನೆಮ್ಮದಿಯಿಂದ ಸಂಚರಿಸಲು ಅನುವು ಮಾಡಿಕೊಡಲಾಗುವುದು ಎಂದರು.
ಡಾ.ಎಸ್.ಗೋಪಾಲರಾಜು ಕಾಲೇಜಿಗೆ ಸಿಸಿ ಟಿವಿ, ಪ್ರೋಜೆಕ್ಟರ್ಗಳ ಅಳವಡಿಕೆ ಮಾಡಲಾಗಿದ್ದು ಮುಂಬರುವ ದಿನಗಳಲ್ಲಿ ವಿಜ್ಞಾನ ಪದವಿ ಕೋರ್ಸ್ಗಳನ್ನು ಸಹ ತೆರೆಯಲು ಚಿಂತನೆ ನಡೆಸಲಾಗಿದೆ. ₹ 240 ಕೋಟಿ ವೆಚ್ಚದ ಏತ ನೀರಾವರಿ ಯೋಜನೆಗೆ ಶಂಕುಸ್ಥಾಪನೆ ಹಾಗೂ ಕಾವೇರಿ ಕುಡಿಯುವ ನೀರು ಪೂರೈಕೆಗೆ ಶೀಘ್ರದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದರು.
ತಹಶೀಲ್ದಾರ್ ಎಸ್.ಎಂ. ಆಶಾ ಪರ್ವೀನ್ ಧ್ವಜಾರೋಹಣ ನೆರವೇರಿಸಿ, ಸಮಾಜದಲ್ಲಿ ಪ್ರತಿಯೊಬ್ಬರು ತಮ್ಮ ಕರ್ತವ್ಯಗಳನ್ನು ಅರಿತು ಅವುಗಳನ್ನು ಸರಿಯಾಗಿ ನಿರ್ವಹಿಸಬೇಕು ಎಂದರು.
ಪುರಸಭಾ ಅಧ್ಯಕ್ಷ ಲಕ್ಷ್ಮೀಕಾಂತ ರಾಜು ಮಾತನಾಡಿ ಆನೇಕಲ್ ಪುರಸಭೆಯನ್ನು ಮಾದರಿ ಪುರಸಭೆಯಾಗಿ ಮಾಡಲು ಎಲ್ಲಾ ರೀತಿಯ ಪ್ರಯತ್ನ ನಡೆಸಲಾಗಿದೆ ಎಂದರು.
ಪಟ್ಟಣದ ಸರಸ್ವತಿ ವಿದ್ಯಾ ಮಂದಿರ ಶಾಲೆಯ ವಿದ್ಯಾರ್ಥಿಗಳು ಯೋಗ ಪ್ರದರ್ಶನ ನಡೆಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಯೋಧರನ್ನು ಸನ್ಮಾನಿಸಲಾಯಿತು.
ಆನೇಕಲ್ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸಿ.ನಾಗರಾಜು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮುನಿರತ್ನಮ್ಮ ನಾರಾಯಣ್, ಉಪಾಧ್ಯಕ್ಷೆ ಚಂದ್ರಕಲಾ ಮುನಿರಾಜು, ಕಾರ್ಯನಿರ್ವಹಣಾಧಿಕಾರಿ ಎನ್. ನೋಮೇಶ್ ಕುಮಾರ್, ಪುರಸಭಾ ಉಪಾಧ್ಯಕ್ಷೆ ಚಂದ್ರಿಕಾ ಹನುಮಂತರಾವ್, ಮಾಜಿ ಅಧ್ಯಕ್ಷ ಎನ್.ಎಸ್. ಅಶ್ವಥನಾರಾಯಣ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಮಂಜುನಾಥ್, ಎಂ. ಆನಂದ್ಕುಮಾರ್, ಪುರಸಭಾ ಸದಸ್ಯರಾದ ನರಸಿಂಹರೆಡ್ಡಿ,