ಔರಾದ್: ತಾಲ್ಲೂಕಿನ ನಾರಾಯಣಪುರ ಗ್ರಾಮದ ಬಡ ಮಹಿಳೆಯೊಬ್ಬರಿಗೆ ಆಶ್ರಯ ಮನೆ ನೀಡದೇ ವಂಚನೆ ಮಾಡಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ಸಲ್ಲಿಸಲಾಗಿದೆ.
ಬಾದಲಗಾಂವ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾರಾಯಣಪುರ ಗ್ರಾಮದ ವಿಧವೆ ವಿಮಲಾಬಾಯಿ ಶಂಕರೆಪ್ಪ ಅವರು ‘ಗ್ರಾಮ ಪಂಚಾಯಿತಿ ವತಿಯಿಂದ ಬಸವ ಯೋಜನೆ ಅಡಿ ಮನೆ ನೀಡದೆ, ವಂಚಿಸಲಾಗಿದೆ’ ಎಂದು ಮೇಲಧಿಕಾರಿಗಳಿಗೆ ದೂರು ನೀಡಿದ್ದಾರೆ.
‘ಕಳೆದ ತಿಂಗಳು ನಡೆದ ಗ್ರಾಮ ಸಭೆಯಲ್ಲಿ ನನಗೆ ಬಸವ ವಸತಿ ಯೋಜನೆಯಡಿ ಫಲಾನುಭವಿಯಾಗಿ ಆಯ್ಕೆ ಮಾಡಲಾಗಿತ್ತು. ಆದರೆ ನಂತರ ಮತ್ತೊಮ್ಮೆ ಸಭೆ ನಡೆಸಿ ಫಲಾನುಭವಿಗಳ ಪಟ್ಟಿಯಿಂದ ನನ್ನನ್ನು ಕೈಬಿಟ್ಟು ಉಳ್ಳವರಿಗೆ ಮನೆ ಹಂಚಿಕೆ ಮಾಡಿದ್ದಾರೆ’ ಎಂದು ದೂರಿದ್ದಾರೆ.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳು ತಮಗೆ ನಿವೇಶನ ಮಂಜೂರು ಮಾಡಿಸಬೇಕು. ಇಲ್ಲವಾದಲ್ಲಿ ಕುಟುಂಬ ಸಮೇತ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸುವುದಾಗಿ ತಿಳಿಸಿದ್ದಾರೆ.