ವಿಜಯಪುರ: ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಸದ್ಬಳಕೆಯಾಗಲು ನಾಗರಿಕರ ಬದ್ಧತೆಯು ಪ್ರಮುಖವಾಗುತ್ತದೆ ಎಂದು ಶಾಸಕ ಪಿಳ್ಳಮುನಿಶಾಮಪ್ಪ ಹೇಳಿದರು.
ಹೋಬಳಿಯ ಚಿಕ್ಕತತ್ತಮಂಗಲ ಗ್ರಾಮದಲ್ಲಿ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಿಂದ 2016–17 ನೇ ಸಾಲಿನ ಪರಿಶಿಷ್ಟ ಪಂಗಡ ಕಾಲೋನಿಗೆ ₹9 ಲಕ್ಷ ವೆಚ್ಚದ ಸಿ.ಸಿ. ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ₹4.66 ಲಕ್ಷದ 14 ಪ್ಯಾಕೇಜ್ಗಳಲ್ಲಿ 60 ಗ್ರಾಮಗಳಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ. ಕುಂದಾಣ ಹೋಬಳಿ, ತೂಬಿಗೆರೆ ಹೋಬಳಿಗಳಿಗೆ ಅನುದಾನ ನೀಡಲಾಗಿದೆ. ವಿಜಯಪುರ ಹೋಬಳಿಯಲ್ಲಿ 9 ಗ್ರಾಮಗಳಲ್ಲಿ ಕಾಮಗಾರಿ ಪ್ರಾರಂಭ ಮಾಡಲಾಗುತ್ತಿದೆ. ಪರಿಶಿಷ್ಟ ಜಾತಿ, ಪಂಗಡದ ಕ್ಷೇತ್ರವಾಗಿರುವುದರಿಂದ ಹೆಚ್ಚಿನ ಅನುದಾನ ಸಮಾಜ ಕಲ್ಯಾಣ ಇಲಾಖೆಯಿಂದ ಬಿಡುಗಡೆ ಮಾಡಿಕೊಡುವಂತೆ ಸಚಿವರಲ್ಲಿ ಮನವಿ ಮಾಡಲಾಗಿದೆ.
ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗಳನ್ನು ಮಾಡಬೇಕು. ಸ್ಥಳೀಯರು ಉತ್ತಮ ನಿರ್ವಹಣೆಗೆ ಒತ್ತು ನೀಡಬೇಕು. ಈಚೆಗೆ ಮಾಡುತ್ತಿರುವ ಕಾಮಗಾರಿಗಳು ಐದು ವರ್ಷಗಳು ಪೂರ್ಣಗೊಳ್ಳುವ ಮುನ್ನವೇ ಹಾಳಾಗುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಜಾಗೃತರಾಗಬೇಕು ಎಂದರು.
ರಸ್ತೆ ಕಾಮಗಾರಿ ಕಳಪೆಯಾಗಿದ್ದರೆ ತಪಾಸಣೆಗೆ ಮುಖ್ಯ ಎಂಜಿನಿಯರ್ ನೇಮಕ ಮಾಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಅನಂತಕುಮಾರಿಚಿನ್ನಪ್ಪ ಮಾತನಾಡಿ, ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಸರ್ಕಾರದಿಂದ ಬರುವಂತಹ ಅನುದಾನಗಳನ್ನು ಸದ್ಬಳಕೆ ಮಾಡಿಕೊಂಡು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಕಾಲೊನಿಗಳ ಅಭಿವೃದ್ಧಿಗಾಗಿ ಮೀಸಲಿಡುವ ಅನುದಾನವನ್ನು ಸಮರ್ಪಕವಾಗಿ ಬಳಸಬೇಕು. ಕಾಲೊನಿಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಕುಡಿಯುವ ನೀರಿನ ಪೂರೈಕೆಗೆ ಒತ್ತು ನೀಡಬೇಕು. ಕಾಮಗಾರಿಗಳಲ್ಲಿ ಗುಣಮಟ್ಟ ಕಳಪೆಯಾದರೆ ನೇರವಾಗಿ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.