‘ಪ್ರಸಕ್ತ ಸಾಲಿನಲ್ಲಿ ₹ 9.58 ಕೋಟಿ ಆದಾಯ ನಿರೀಕ್ಷಿಸಿದ್ದು, ಈಗಾಗಲೇ ₹ 7.5 ಕೋಟಿ ತೆರಿಗೆ ಸಂಗ್ರಹವಾಗಿದೆ. ಇನ್ನೂ ₹ 2.08 ಕೋಟಿ ಆದಾಯ ಬರಬೇಕಿದೆ’ ಎಂದು ದಾವಣಗೆರೆ ಎಪಿಎಂಸಿ ನೂತನ ಅಧ್ಯಕ್ಷ ಮುದೇಗೌಡರ ಗಿರೀಶ್ ತಿಳಿಸಿದರು.
ಚುನಾವಣೆ ಬಳಿಕ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ತೀವ್ರ ಬರಗಾಲವಿದ್ದು, ಸಾವಿರಾರು ಎಕರೆ ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿದೆ. ಹೀಗಾಗಿ ನಿರೀಕ್ಷಿತ ಗುರಿ ಸಾಧಿಸಲು ಕಷ್ಟವಾಗುತ್ತದೆ’ ಎಂದು ತಿಳಿಸಿದರು.
‘ಎಪಿಎಂಸಿಯ ₹141 ಕೋಟಿ ಅನುದಾನದಲ್ಲಿ ನಗರದ ವಿವಿಧೆಡೆ ರಸ್ತೆ ಕಾಮಗಾರಿ ಕೈಗೊಳ್ಳಲಾಗಿದೆ. ಜೊತೆಗೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸುವುದು, ರೈತರ ಧಾನ್ಯಗಳ ಸಂಗ್ರಹಕ್ಕೆ ಗೋದಾಮುಗಳ ನಿರ್ಮಾಣ, ರೈತರ ಹೊಲಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸೇರಿದಂತೆ ವಿವಿಧ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಇದಕ್ಕಾಗಿ ₹30 ಕೋಟಿ ಅನುದಾನಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಮಾಹಿತಿ ನೀಡಿದರು.
‘ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿ, ಎಪಿಎಂಸಿಯಲ್ಲಿ ವಿದ್ಯುನ್ಮಾನ ತೂಕದ ಯಂತ್ರಗಳ ಅಳವಡಿಕೆ, ಮಳಿಗೆಗಳ ಬಾಡಿಗೆ ಪರಿಶೀಲನೆ ಸೇರಿದಂತೆ ರೈತರ ಪ್ರಗತಿಗೆ ಶ್ರಮಿಸಲಾಗುವುದು’ ಎಂದು ಹೇಳಿದರು.
‘ತೋಟಗಾರಿಕೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಮಾರ್ಗದರ್ಶನದಲ್ಲಿ ದಾವಣಗೆರೆ ಎಪಿಎಂಸಿಯನ್ನು ರಾಜ್ಯದಲ್ಲಿಯೇ ನಂ. 1 ಎಪಿಎಂಸಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು’ ಎಂದು ಅವರು ತಿಳಿಸಿದರು.
ನೂತನ ಉಪಾಧ್ಯಕ್ಷ ಎಂ.ಬಿ. ಹಾಲಪ್ಪ ಮಾತನಾಡಿ, ‘ಅಗತ್ಯವಿರುವ ಕಡೆಯಲ್ಲಿ ಗೋದಾಮು ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದರು.
ಎಪಿಎಂಸಿ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.