ಮಡಿಕೇರಿ: ವಿರಾಜಪೇಟೆ ತಾಲ್ಲೂಕು -ದಿಡ್ಡಳ್ಳಿಯ 528 ನಿರಾಶ್ರಿತ ಗಿರಿಜನ ಕುಟುಂಬಗಳಿಗೆ ಹಂಚಿಕೆ ಮಾಡಿರುವ ನಿವೇಶನದಲ್ಲಿ ಮನೆ ನಿರ್ಮಿಸಿಕೊಡಲು ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಪುನರ್ವಸತಿ ಸಮಿತಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಮಿತಿ ಸಭೆ ಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವಿನ್ಸೆಂಟ್ ಡಿಸೋಜ, ಹಕ್ಕುಪತ್ರ ವಿತರಿಸಿ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮದಿಂದ ಮನೆ ನಿರ್ಮಾಣ ಮಾಡಲಾಗುವುದು.
ಬಸವನಹಳ್ಳಿಯಲ್ಲಿ 181, ರಾಂಪುರ 171, ಕೆದ ಮುಳ್ಳೂರು ವ್ಯಾಪ್ತಿ ಯಲ್ಲಿ 176 ಒಟ್ಟು 528 ಕುಟುಂಬಗಳಿಗೆ ಲಾಟರಿ ಮೂಲಕ ನಿವೇಶನ ಹಂಚಿಕೆ ಮಾಡಲಾಗಿದೆ. ಬಡಾವಣೆ ನಿರ್ಮಾಣ ಮಾಡಿ, ಮನೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು. ಮನೆ ನಿರ್ಮಾಣಕ್ಕೆ ಅಗತ್ಯವಾಗಿರುವ ಅನುದಾನದ ಕುರಿತು ಪ್ರಸ್ತಾವ ಸಲ್ಲಿಸಲು ಸಮಗ್ರ ಗಿರಿಜನ ಅಭಿವೃದ್ಧಿ ಇಲಾಖೆ ಅಧಿ ಕಾರಿ ಪ್ರಕಾಶ್ ಅವರಿಗೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಮಾತನಾಡಿ, ನಿವೇಶನ ಹಂಚಿಕೆ ನಂತರ ಹಕ್ಕು ವಿತರಿ ಸುವುದರ ಜೊತೆಗೆ ಮನೆ ನಿರ್ಮಿಸಿ ಸ್ವ ಉದ್ಯೋಗ ಕೈಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಚಾರುಲತಾ ಸೋಮಲ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಾಶ್, ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ಜಿ.ಪಂ. ಯೋಜನಾ ನಿರ್ದೇಶಕ ಸಿದ್ದಲಿಂಗ ಮೂರ್ತಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಶೇನ್, ಕೈಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಶಬೀರ್ ಪಾಷ, ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆ ಸಹಾಯಕ ನಿರ್ದೇಶಕ ಗುರುಸ್ವಾಮಿ, ತಾಲ್ಲೂಕು ವಿಸ್ತರಣಾಧಿಕಾರಿ ಲೋಹಿತ್ ಹಾಜರಿದ್ದರು.