ಬೆಂಗಳೂರು: ‘ಜೀತದಾಳುಗಳಿಗೆ ಸೂಕ್ತ ಪುನರ್ವಸತಿ ಕಲ್ಪಿಸಿ, ಕರ್ನಾಟಕವನ್ನು ಜೀತಮುಕ್ತ ರಾಜ್ಯವನ್ನಾಗಿ ಮಾಡಬೇಕು’ ಎಂದು ಒತ್ತಾಯಿಸಿ ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟದ ವತಿಯಿಂದ ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ರಾಜ್ಯದ ಹಲವು ಜಿಲ್ಲೆಗಳಿಂದ ಬಂದಿದ್ದ ಪ್ರತಿಭಟನಾಕಾರರು, ಪುರಭವನದ ಎದುರು ಸೇರಿ ಕೆಲ ಹೊತ್ತು ಪ್ರತಿಭಟನೆ ನಡೆಸಿದರು. ಬಳಿಕ ಅಲ್ಲಿಂದ ಮೆರವಣಿಗೆಯಲ್ಲಿ ಹೊರಟು ಸ್ವಾತಂತ್ರ್ಯ ಉದ್ಯಾನದಲ್ಲಿ ಬಹಿರಂಗ ಸಭೆ ಮಾಡಿದರು.
‘2016ರಲ್ಲಿ ನಡೆಸಿದ್ದ ಸಮೀಕ್ಷೆಯಲ್ಲಿ ಗುರುತಿಸಲಾಗಿದ್ದ 3,119 ಜೀತ ವಿಮುಕ್ತರಿಗೆ ಇದುವರೆಗೂ ಪುನರ್ವಸತಿ ಕಲ್ಪಿಸಿಲ್ಲ. ಹೊಸದಾಗಿ 12,997 ಜೀತದಾಳುಗಳು ಸಹ ವಿಮುಕ್ತಿ ಬಯಸಿ ಅರ್ಜಿ ಸಲ್ಲಿಸಿದ್ದು, ಅವರಿಗೂ ಪುನರ್ವಸತಿ ಸಿಕ್ಕಿಲ್ಲ’ ಎಂದು ಪ್ರತಿಭಟನಾಕಾರರು ದೂರಿದರು.
‘ಕೇಂದ್ರ ಸರ್ಕಾರದ ನಿಯಮಗಳಂತೆ ಪುನರ್ವಸತಿ ಸೌಲಭ್ಯ ಕಲ್ಪಿಸಬೇಕು. ಮಾಸಾಶನ ಮೊತ್ತವನ್ನು ₹3 ಸಾವಿರಕ್ಕೆ ಹೆಚ್ಚಿಸಬೇಕು. ಜೀತದಾಳು ಕುಟುಂಬಕ್ಕೆ ತಲಾ 5 ಎಕರೆ ಜಮೀನು ಕೊಡಬೇಕು. ಇದಕ್ಕಾಗಿ ಮುಂಬರುವ ರಾಜ್ಯ ಮುಂಗಡಪತ್ರದಲ್ಲಿ ಸೂಕ್ತ ಅನುದಾನ ನೀಡಬೇಕು’ ಎಂದು ಅವರು ಒತ್ತಾಯಿಸಿದರು.
‘ಉತ್ತರ ಕರ್ನಾಟಕದ 15 ಜಿಲ್ಲೆಗಳಲ್ಲಿ ಬಿಟ್ಟಿ ಚಾಕರಿ ಪದ್ಧತಿ ಹಾಗೂ ಕೊಡಗು ಜಿಲ್ಲೆಯಲ್ಲಿ ಬೊಟ್ ಪದ್ಧತಿ ಜಾರಿಯಲ್ಲಿದೆ. ಅಂಥ ಪದ್ಧತಿಯಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಮುಕ್ತಿ ಕೊಡಿಸಬೇಕು. ಜತೆಗೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.