ಬೆಂಗಳೂರು: ವಿದ್ಯುತ್ ಗುತ್ತಿಗೆದಾರರೊಬ್ಬರಿಂದ ₹ 75 ಸಾವಿರ ಲಂಚ ಪಡೆಯುತ್ತಿದ್ದ ಮಾರತ್ಹಳ್ಳಿ ಉಪ ವಿಭಾಗದ ಬೆಸ್ಕಾಂ ಸಹಾಯಕ ಎಂಜಿನಿಯರ್ (ಎಇ) ನಾಗರಾಜ್ ಅವರು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬಲೆಗೆ ಬಿದ್ದಿದ್ದಾರೆ.
‘ಮಾರತ್ಹಳ್ಳಿಯ ಆನಂದನಗರದಲ್ಲಿ ನಿವೇಶನವೊಂದರ ಮುಂಭಾಗದಲ್ಲಿದ್ದ ವಿದ್ಯುತ್ ಕಂಬವನ್ನು ಸ್ಥಳಾಂತರಿಸಲು ನಾಗರಾಜ್ ಅವರು ₹ 2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬಳಿಕ ₹ 1.75 ಲಕ್ಷ ನೀಡುವಂತೆ ಒತ್ತಾಯಿಸುತ್ತಿದ್ದಾರೆ’ ಎಂದು ಗುತ್ತಿಗೆದಾರ ಎಸಿಬಿಗೆ ದೂರು ನೀಡಿದ್ದರು.
ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಎಸಿಬಿ ಅಧಿಕಾರಿಗಳು, ಗುತ್ತಿಗೆದಾರನಿಂದ ನಾಗರಾಜ್ ₹75 ಸಾವಿರ ಲಂಚ ಪಡೆಯುತ್ತಿದ್ದಾಗ ಬಂಧಿಸಿದ್ದಾರೆ. ಆರೋಪಿ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.