ಚಿಕ್ಕನಾಯಕನಹಳ್ಳಿ: ‘ಬರಗಾಲ, ಕೊಬ್ಬರಿಗೆ ಬೆಂಬಲ ಬೆಲೆ ಸೇರಿದಂತೆ ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ಫೆ.23ರಂದು ಬೆಂಗಳೂರಿನಲ್ಲಿ ಪಕ್ಷದ ಶಾಸಕರ ಸಭೆ ಕರೆಯಲಾಗಿದೆ’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ತಿಳಿಸಿದರು.
ಪಟ್ಟಣದಲ್ಲಿ ಗುರುವಾರ ಸಂಜೆ ನಡೆದ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
‘ತೆಂಗು ಬೆಳೆಗಾರರ ಸಮಸ್ಯೆ ಬಗ್ಗೆ ಪ್ರಧಾನಿ ಅವರ ಬಳಿ ಚರ್ಚಿಸಿ ಕೊಬ್ಬರಿಗೆ ಕ್ವಿಂಟಲ್ಗೆ ₹ 14 ಸಾವಿರ ಬೆಲೆ ನೀಡುವಂತೆ ಒತ್ತಾಯಿಸಿದ್ದೆ ಅವರು ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ’ ಎಂದರು.
‘ಕೃಷಿ ವಿ.ವಿ ವಿಶ್ರಾಂತ ಕುಲಪತಿ ಡಾ.ನಾರಾಯಣಗೌಡ ಅವರು ರೈತರು ತೆಂಗು ಬೆಳೆಯಲು ಖರ್ಚಾಗುವ ಹಣದ ಬಗ್ಗೆ ವಿವರಣೆ ನೀಡಿದ್ದಾರೆ. ಅವರ ವರದಿಗೆ ಪೂರಕವಾಗಿ ಹಾಗೂ ಗೋರಕ್ನಾಥ್ ಸಮಿತಿ ವರದಿ ಅನುಸಾರ ಮನವಿ ಸಲ್ಲಿಸಲಾಗಿದೆ’ ಎಂದು ಹೇಳಿದರು.
ಅದ್ಧೂರಿ ಕಲ್ಯಾಣೋತ್ಸವ: ಶಾಸ್ತ್ರೋಕ್ತವಾಗಿ ಶ್ರೀನಿವಾಸ ಕಲ್ಯಾಣೋತ್ಸವ ಅದ್ಧೂರಿಯಾಗಿ ನೆರವೇರಿತು. ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ, ಮಾಜಿ ಸಚಿವ ಚೆನ್ನಿಗಪ್ಪ, ವಿಧಾನ ಪರಿಷತ್ ಸದಸ್ಯ ಬೆಮಲ್ ಕಾಂತರಾಜು, ರಮೇಶ್ಬಾಬು, ಶಾಸಕರಾದ ಎಂ.ಟಿ.ಕಷ್ಣಪ್ಪ, ಶ್ರೀನಿವಾಸ್, ತಿಪಟೂರಿನ ಜೆಡಿಎಸ್ಮುಖಂಡ ಲೋಕೇಶ್ವರ್, ಜಿಲ್ಲಾಧಿಕಾರಿ ಕೆ.ಪಿ.ಮೋಹನ್ರಾಜ್ ಕಲ್ಯಾಣೋತ್ಸವದಲ್ಲಿ ಪಾಲ್ಗೊಂಡಿದ್ದರು.