ಬಳ್ಳಾರಿ: ಪ್ರಸಕ್ತ ಸಾಲಿನ ಸ್ನಾತಕ ಪದವಿಯ ಎರಡನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಏಕಾಏಕಿ ವಿಷಯಗಳ ಆಯ್ಕೆಯ ಮುಕ್ತ ನೀತಿಯನ್ನು ಜಾರಿಗೆ ತಂದಿರುವ ಕ್ರಮವನ್ನು ವಿರೋಧಿಸಿ ಇಲ್ಲಿನ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಆವರಣದಲ್ಲಿ ಶುಕ್ರವಾರ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ವಿಶ್ವವಿದ್ಯಾಲಯದ ಆವರಣದ ಎದುರು ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಡಾ.ಪ್ರಮೋದ, ಜಿಲ್ಲಾ ಘಟಕದ ಅಧ್ಯಕ್ಷ ಎಂ.ಗೋವಿಂದ, ಕಾರ್ಯದರ್ಶಿ ಜಿ.ಸುರೇಶ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿನಿಯರು ಸಮಾವೇಶಗೊಂಡು ಹೊಸ ನೀತಿ ಜಾರಿಗೊಳಿಸಿರುವ ಕ್ರಮದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಕುಲ ಸಚಿವ ಪ್ರೊ.ಟಿ.ಎಂ.ಭಾಸ್ಕರ್ ಅವರಿಗೆ ಮನವಿಪತ್ರವನ್ನು ಸಲ್ಲಿಸಿದರು.
ಶೈಕ್ಷಣಿಕ ವರ್ಷಾರಂಭದ ಮಧ್ಯೆಭಾಗದಲ್ಲಿ ಈ ಹೊಸ ನೀತಿಯನ್ನು ಜಾರಿಗೆ ತಂದಿರುವುದು ವಿದ್ಯಾರ್ಥಿಗಳಿಗೆ ಮತ್ತಷ್ಟು ಆರ್ಥಿಕ ಹೊರೆಯನ್ನಾಗಿಸಿದೆ. ಶೈಕ್ಷಣಿಕ ವರ್ಷಾರಂಭದಲ್ಲಿ ಅಧ್ಯಾಪಕರ, ವಿದ್ಯಾರ್ಥಿ ಸಂಘಟನೆಗಳ ಅಭಿಪ್ರಾಯವನ್ನು ಸಂಗ್ರಹಿಸದೆ, ಏಕಾಏಕಿ ವಿಶ್ವವಿದ್ಯಾಲಯವು ಈ ನಿರ್ಧಾರ ತೆಗೆದುಕೊಂಡಿರುವುದು ವಿದ್ಯಾರ್ಥಿ ವಿರೋಧಿ ನೀತಿಯಾಗಿದೆ ಎಂದು ದೂರಿದರು. ಕೂಡಲೇ ಈ ನೀತಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ಪದಾಧಿಕಾರಿಗಳಾದ ರಾಜ, ರಂಗಸ್ವಾಮಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಹಾಜರಿದ್ದರು.