ಭೋಪಾಲ್: ಮಧ್ಯಪ್ರದೇಶ ವಿಧಾನಸಭಾ ಸದಸ್ಯ ಹಾಗೂ ಬಿಜೆಪಿಯ ನಾಯಕ ರಾಮೇಶ್ವರ್ ಶರ್ಮಾ, ‘ದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವರಾರೂ ನಿಜವಾದ ರೈತರಲ್ಲ’ ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ದೇಶದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆಯ ಬಗ್ಗೆ ಮಾತನಾಡಿರುವ ಅವರು, ‘ಕೃಷಿ ಹೆಸರಲ್ಲಿ ಸಾಲ ಪಡೆಯಲು ಮಾತ್ರವೇ ರೈತರೆಂದು ಹೇಳಿಕೊಳ್ಳುವವರು ಹಾಗೂ ಬೇಕಾದಷ್ಟು ಶ್ರೀಮಂತರು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿದ್ದೇನೆ. ಆದರೆ, ಇದುವರೆಗೂ ಯಾವೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನಾನು ನೋಡಿಲ್ಲ. ನಿಜವಾದ ರೈತರು ಸಂಕಷ್ಟಗಳ ವಿರುದ್ಧ ಹೋರಾಟ ನಡೆಸುತ್ತಾರೆ’ ಎಂದು ಹೇಳಿಕೆ ನೀಡಿದ್ದು ಸದ್ಯ ವಿವಾದ ಉಂಟುಮಾಡಿದೆ.
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಗೆಲ್ಲಲು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ರೈತರ ಆತ್ಮಹತ್ಯೆಯನ್ನು ಪ್ರಮುಖ ವಿಷಯವಾಗಿ ಆಯ್ದುಕೊಂಡು ತಮ್ಮ ತಮ್ಮ ಪಕ್ಷದ ಪರ ಪ್ರಚಾರ ಕೈಗೊಂಡಿವೆ.
ಇದಕ್ಕೂ ಮೊದಲು ಕಾಂಗ್ರೆಸ್ನ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ, ‘ಕೇಂದ್ರ ಸರ್ಕಾರ ರೈತರ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಸೋತಿದ್ದು, ಸಾಲ ಮನ್ನಾ ವಿಚಾರದಲ್ಲಿ ನಿರ್ಲಕ್ಷವಹಿಸಿದೆ. ಹೀಗಾಗಿ ಉತ್ತರ ಪ್ರದೇಶದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ’ ಎಂದು ದೂರಿದ್ದರು.