ಬೆಂಗಳೂರು: ‘ಕೆಲ ಗ್ರಾಮ ಪಂಚಾಯಿತಿ ಸಭೆಗಳಲ್ಲಿ ಅಂಗೀಕರಿಸಿದ ನಿರ್ಣಯಗಳನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಅನುಷ್ಠಾನಗೊಳಿಸುತ್ತಿಲ್ಲ’ ಎಂದು ಸಂಸದ ವೀರಪ್ಪ ಮೊಯಿಲಿ ಅವರು ಅಸಮಾಧಾನ ವ್ಯಕ್ತಪಡಿಸಿದರು.
ನಗರದಲ್ಲಿ ಮಂಗಳವಾರ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆಯಲ್ಲಿ ಅವರು ವಿವಿಧ ಯೋಜನೆಗಳ ಪ್ರಗತಿ ವರದಿಯನ್ನು ಪರಿಶೀಲಿಸಿ ಮಾತನಾಡಿದರು.
‘ರಾಜ್ಯದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಯಲ್ಲಿದೆ. ಆದರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಲ ಗ್ರಾಮ ಪಂಚಾಯಿತಿಗಳಲ್ಲಿ ಸದಸ್ಯರು ಅನುಮೋದಿಸಿದ ನಿಯಮಬದ್ಧ ನಿರ್ಣಯಗಳನ್ನು ಪಿಡಿಒಗಳು ಜಾರಿಗೆ ತರುತ್ತಿಲ್ಲ. ಇಂತಹವರ ವಿರುದ್ಧ ಕ್ರಮಕೈಗೊಳ್ಳಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್ ಮಾತನಾಡಿ, ‘ಪರಿಶಿಷ್ಟ ಜಾತಿ ಮತ್ತು ಪಂಗಡದ ಅಂಗನವಾಡಿ ಮಕ್ಕಳಿಗೆ ಮುಂದಿನ ತಿಂಗಳಿನಿಂದ ವಾರಕ್ಕೆ ಎರಡು ದಿನ ಮೊಟ್ಟೆ ನೀಡಲು ಹೊರಡಿಸಿರುವ ಆದೇಶವನ್ನು ಎಲ್ಲ ಮಕ್ಕಳಿಗೂ ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು’ ಎಂದರು.
ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ಮಾತನಾಡಿ, ‘ಜಿಲ್ಲೆಯ ಎಲ್ಲ ತಾಲ್ಲೂಕು ಕಚೇರಿಗಳಲ್ಲಿ ಸರ್ವೇಯರ್ಗಳ ಕೊರತೆ ಇದ್ದು, ಇದನ್ನು ನೀಗಿಸುವಂತೆ’ ಜಿಲ್ಲಾಧಿಕಾರಿ ಪಾಲಯ್ಯ ಅವರಿಗೆ ಮನವಿ ಮಾಡಿದರು.