ವಿಜಯಪುರ: ತೀವ್ರ ಬರಗಾಲಕ್ಕೆ ತುತ್ತಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜನ-ಜಾನುವಾರಗಳು ಕುಡಿಯುವ ನೀರಿಲ್ಲದೆ ಪರದಾಡುತ್ತಿವೆ.
ರಾಸುಗಳಿಗೆ ನೀರು ಮೇವು ಇಲ್ಲದ ಕಾರಣ ರೈತರು ಹಸುಗಳನ್ನು ಕಸಾಯಿಖಾನೆಗಳಿಗೆ ಅಗ್ಗದ ದರದಲ್ಲಿ ಮಾರಾಟ ಮಾಡುತ್ತಿದ್ದಾರೆ.
ಜಿಲ್ಲೆಯ ಜನರು ಇಷ್ಟೆಲ್ಲ ಸಂಕಷ್ಟಗಳನ್ನು ಅನುಭವಿಸುತ್ತಿದ್ದರೂ, ಸರ್ಕಾರ ಕೆರೆಗಳಲ್ಲಿ ತುಂಬಿಕೊಂಡಿರುವ ಹೂಳು ತೆಗೆದು ,ಅಂತರ್ಜಲದ ಮಟ್ಟ ಸುಧಾರಣೆ ಮಾಡಲು ಮುಂದಾಗಿಲ್ಲವೆಂದು ಜಯ ಕರ್ನಾಟಕ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಕೆ.ಮಂಜುನಾಥ್ ಆರೋಪಿಸಿದ್ದಾರೆ.
ಪಟ್ಟಣದ ಜಯಕರ್ನಾಟಕ ಸಂಘಟನೆಯ ಕಚೇರಿಯಲ್ಲಿ ಮಾತನಾಡಿದ ಅವರು, ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಹೋಬಳಿ, ಚನ್ನರಾಯಪಟ್ಟಣ ಹೋಬಳಿಯ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಟ್ಯಾಂಕರುಗಳಲ್ಲಿ ಪೂರೈಕೆ ಮಾಡಲಿಕ್ಕೂ ನೀರು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.