ಲಿಂಗಸುಗೂರು(ಮುದಗಲ್): ಮಹಿಳೆಯರು ಮೌಢ್ಯತೆಯಿಂದ ಹೊರಬಂದು ಶಿಕ್ಷಣ ಪಡೆಯಬೇಕು ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಗಂಗಮ್ಮ ಸತ್ಯಂಪೇಟ್ ಈಚೆಗೆ ಹೇಳಿದರು.
ಪಟ್ಟಣದ ಈಶ್ವರ ದೇವಸ್ಥಾನ ಆವರಣದಲ್ಲಿ ಅನ್ನಪೂರ್ಣೇಶ್ವರಿ ಮಹಿಳಾ ಮಂಡಳಿಯಿಂದ ಹಮ್ಮಿಕೊಂಡಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಂವಿಧಾನದಲ್ಲಿ ಮಹಿಳೆ ಪುರುಷರಿಗೆ ಸಮಾನವಾಗಿ ಅಧಿಕಾರ ನೀಡಿದರೂ ಸ್ತ್ರೀಶಕ್ತಿ, ಮಹಿಳಾ ಸಂಘಟನೆಗಳು ತಮ್ಮ ಹಕ್ಕಿಗಾಗಿ ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ಬಂದಿದೆ. ಪಾಲಕರು ತಮ್ಮ ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಮಹಿಳೆಯರು ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಮುಂದೆ ಬರಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗೀತಾ ಕರಿಯಪ್ಪ ವಜ್ಜಲ್, ಜಿಲ್ಲಾ ಪಂಚಾಯಿತಿ ಸದಸ್ಯೆ ರೇಣುಕಾ ಚಂದ್ರಶೇಖರ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಶ್ವೇತಾ ವೆಂಕನಗೌಡ, ಪುರಸಭೆ ಸದಸ್ಯೆ ಶಾಂತಾಬಾಯಿ ಕುಲಕರ್ಣಿ, ಕ್ಷೇತ್ರ ಸಮನ್ವಯಾಧಿಕಾರಿ ಸರೋಜಾ ಪೋಳ್, ಮಹಿಳಾ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷೆ ಶರಣಮ್ಮ ಹೂನೂರು, ಲಕ್ಷ್ಮಿದೇವಿ, ಉಮಾದೇವಿ, ಶಿವಮ್ಮ ಪಟ್ಟದಕಲ್ ಇದ್ದರು.