ಲಿಂಗಸುಗೂರು(ಮುದಗಲ್): ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ಆಲೋಚನೆಯಿಂದ ಮುನ್ನಡೆದರೆ ಸಾಧನೆ ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾರಾಯಣಪ್ಪ ಶನಿವಾರ ಹೇಳಿದರು.
ಇಲ್ಲಿನ ಐಎಂಎ ಸಭಾಂಗಣದಲ್ಲಿ ನಡೆದ ರಾಜ್ಯ ಮಾದಿಗ ನೌಕರರ ಸಂಘದ 4 ನೇ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸಮಾಜದ ಎಲ್ಲ ವರ್ಗಗಳಲ್ಲಿ ಬಡವರು, ಪ್ರತಿಭಾವಂತ ಮಕ್ಕಳಿದ್ದಾರೆ. ಮಾದಿಗ ಸಮಾಜ ಅತ್ಯಂತ ಬಡತನ ಹೊಂದಿದ್ದರೂ ಪ್ರತಿಭಾವಂತ ಮಕ್ಕಳಿದ್ದಾರೆ. ಅವರಿಗೆ ಅವಕಾಶವಿಲ್ಲದೆ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿಲ್ಲ. ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಪರಿಶಿಷ್ಟ ಜಾತಿ ಸಮುದಾಯದ ಜನರು ಮೀಸಲಾತಿ ಭ್ರಮೆಯಿಂದ ಹೊರಬಂದು ಸಾಧನೆ ಮಾಡಬೇಕು ಎಂದರು. ಉಪನ್ಯಾಸಕ ಡಾ.ಸಿದ್ದಲಿಂಗಪ್ಪ ಕೊಟ್ನೆಕಲ್ ವಿಶೇಷ ಉಪನ್ಯಾಸ ನೀಡಿದರು.
ಪುರಸಭೆ ಅಧ್ಯಕ್ಷ ಖಾದರಪಾಶಾ ಮಾದರ ಚೆನ್ನಯ್ಯ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಬಳಿಕ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಸಂಘದ ಅಧ್ಯಕ್ಷ ಡಿ.ಬಿ.ಸೋಮನಮರಡಿ, ವ್ಯೆದ್ಯಾಧಿಕಾರಿ ಡಾ.ಲಕ್ಷ್ಮಪ್ಪ, ಮೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಸಿ.ಹುಲಗಪ್ಪ ಆನೆಹೊಸೂರು, ಎಚ್.ಬಿ.ಮುರಾರಿ, ಪಾಮಯ್ಯ ಮುರಾರಿ, ದೊಡ್ಡಪ್ಪ ಮುರಾರಿ, ಮಧು ಚಕ್ರವರ್ತಿ ಇದ್ದರು.