ಬೀದರ್: ಜಿಲ್ಲೆಯಲ್ಲಿ ಸರ್ಕಾರಿ ಕಾನೂನು ಕಾಲೇಜು ಹಾಗೂ ಕೃಷಿ ಮಹಾವಿದ್ಯಾಲಯ ಆರಂಭಿಸಬೇಕು ಎಂದು ಕಾಂಗ್ರೆಸ್ ಜಿಲ್ಲಾ ಘಟಕವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.
ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ನೇತೃತ್ವದ ಕಾಂಗ್ರೆಸ್ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಮುಖಂಡರ ನಿಯೋಗ ಬೆಂಗಳೂರಿನಲ್ಲಿ ಈಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಬೀದರ್ನಲ್ಲಿ ಸರ್ಕಾರಿ ಕಾನೂನು ಕಾಲೇಜು ಮತ್ತು ಕೃಷಿ ಮಹಾವಿದ್ಯಾಲಯ ಆರಂಭಿ ಸುವುದರಿಂದ ಜಿಲ್ಲೆಯ ಯುವಜನರಿಗೆ ಅನುಕೂಲವಾಗಲಿದೆ. ಶೈಕ್ಷಣಿಕ ಕ್ಷೇತ್ರಕ್ಕೂ ಪ್ರಾಮುಖ್ಯ ನೀಡಿದಂತಾಗಲಿದೆ ಎಂದು ಧರ್ಮಸಿಂಗ್ ಸಿಎಂಗೆ ಮನವರಿಕೆ ಮಾಡಿದರು.
ಯೂನಾನಿ ಕಾಲೇಜು, ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ ಮಾಡಬೇಕು. ಬಸವಕಲ್ಯಾಣದಲ್ಲಿ ವರ್ತುಲ ರಸ್ತೆ ನಿರ್ಮಿಸಬೇಕು. ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಮರುಜೀವ ನೀಡಲು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಗೋದಾವರಿ ಕಣಿವೆ ನೀರು ಬಳಕೆಗೆ ಪ್ರತ್ಯೇಕ ಜಲಭಾಗ್ಯ ನಿಗಮ ಸ್ಥಾಪಿಸಬೇಕು. ಈ ಬಾರಿ ಬಜೆಟ್ನಲ್ಲಿ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಭೂಸೇನಾ ನಿಗಮದ ಅಧ್ಯಕ್ಷ ರಾಜಶೇಖರ ಪಾಟೀಲ್, ಉಗ್ರಾಣ ನಿಗಮದ ಅಧ್ಯಕ್ಷ ರಹೀಂ ಖಾನ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕಾಜಿಅರ್ಷದ್ ಅಲಿ, ಮಾಜಿ ಶಾಸಕ ಎಂ.ಜಿ. ಮುಳೆ, ಹಿಂದುಳಿದ ವರ್ಗಗಳ ಮುಖಂಡ ಬಿ. ನಾರಾಯಣರಾವ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೋಹಿದಾಸ್ ಘೋಡೆ, ಕೆ.ಎಸ್. ಪ್ರಭಾಕರ ನಿಯೋಗದಲ್ಲಿದ್ದರು.