ಬೆಂಗಳೂರು: ಕೆ.ಆರ್.ಪುರದ ಅಯ್ಯಪ್ಪನಗರದಿಂದ ಹಳೆ ಮದ್ರಾಸ್ ರಸ್ತೆಗೆ ಸಂಪರ್ಕ ಕಲ್ಪಿಸುವ ಬಸವನಪುರ ಮುಖ್ಯರಸ್ತೆಯ ಡಾಂಬರೀಕರಣ ಕಾಮಗಾರಿಗೆ ಬಸವನಪುರ ವಾರ್ಡ್ನ ಪಾಲಿಕೆ ಸದಸ್ಯ ಜಯಪ್ರಕಾಶ್ ಗುರುವಾರ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ‘ಈ ಮಾರ್ಗದಲ್ಲಿ ಒಳಚರಂಡಿ ಕಾಮಗಾರಿ ಪೂರ್ಣಗೊಂಡಿದ್ದು, ಈಗ ₹ 1 ಕೋಟಿ ವೆಚ್ಚದಲ್ಲಿ ಡಾಂಬರು ಹಾಕಿಸಲಾಗುತ್ತಿದೆ. 70 ಲಕ್ಷಕ್ಕೂ ಅಧಿಕ ಹಣವನ್ನು ಖರ್ಚು ಮಾಡಿ ಅಡ್ಡರಸ್ತೆಗಳನ್ನು ದುರಸ್ತಿ ಮಾಡಲಾಗಿದೆ’ ಎಂದರು.
‘ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯಲು ರಸ್ತೆ ಪಕ್ಕದಲ್ಲಿ ಕಾಲುವೆ ನಿರ್ಮಾಣ ಹಾಗೂ ರಸ್ತೆಯ ಗುಂಡಿಗಳನ್ನು ಮುಚ್ಚುವ ಕಾರ್ಯವು ಭರದಿಂದ ಸಾಗುತ್ತಿದೆ. ಕಸ ವಿಲೇವಾರಿ ಸಮಸ್ಯೆಯನ್ನು ಬಗೆಹರಿಸಲಾಗುವುದು’ ಎಂದರು.
‘ಯಾವುದೇ ಪ್ರತಿಫಲವಿಲ್ಲದೆ ಗುತ್ತಿಗೆದಾರ ಚಲಪತಿ ಅವರು ಬಸವನಪುರ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಎಲ್ಲ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡುತ್ತಿದ್ದಾರೆ’ ಎಂದು ಶ್ಲಾಘಿಸಿದರು.