ರಾಮನಗರ: ‘ಜಿಲ್ಲಾ ಆಸ್ಪತ್ರೆ ನಿರ್ಮಾಣ ಸಂಬಂಧ ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ವಿನಾಕಾರಣ ಕಾಲಹರಣ ಮಾಡಿದರು’ ಎಂದು ಶಾಸಕ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.
ನಗರದಲ್ಲಿ ಅವರು ಪತ್ರಕರ್ತರ ಜೊತೆ ಮಾತನಾಡಿದರು. ‘2009ರಲ್ಲಿ ನಾನು ಲೋಕಸಭೆ ಸದಸ್ಯನಾಗಿದ್ದಾಗ ಜಿಲ್ಲೆಯಲ್ಲಿ ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹30 ಕೋಟಿ ಬಿಡುಗಡೆ ಮಾಡಿಸಿಕೊಟ್ಟಿದ್ದೆ. ಆದರೆ ಆ ಅನುದಾನ ಬಳಕೆ ಆಗಲಿಲ್ಲ. ಈಗ ಅದೇ ಆಸ್ಪತ್ರೆ ನಿರ್ಮಾಣಕ್ಕೆ ₹ 70 ಕೋಟಿ ವ್ಯಯಿಸಲಾಗುತ್ತಿದೆ. ಮೊದಲೇ ಈ ಕೆಲಸ ಮಾಡಿದ್ದರೆ ಹಣ ಉಳಿಯುತ್ತಿತ್ತು’ ಎಂದರು.
‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೂರುವರೆ ವರ್ಷದಿಂದಲೂ ಇಲ್ಲಿ ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಪ್ರಯತ್ನ ಮಾಡುತ್ತಲೇ ಬಂದಿದ್ದೇನೆ. ಲೋಕೋಪಯೋಗಿ ಇಲಾಖೆಗೆ ಸೇರಿದ್ದ ಜಾಗವನ್ನು ಆಸ್ಪತ್ರೆಗೆ ಬಳಸಿಕೊಳ್ಳಲು ಈ ಹಿಂದೆ ಪ್ರಸ್ತಾಪ ಮಾಡಿದ್ದೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವರು ಈ ಪ್ರಸ್ತಾವವನ್ನು ತಿರಸ್ಕರಿಸಿದ್ದರು. ಈಗ ಅದೇ ಜಾಗದಲ್ಲಿ ಶಂಕುಸ್ಥಾಪನೆ ಮಾಡಲಾಗುತ್ತಿದೆ’ ಎಂದರು.
ಏಪ್ರಿಲ್ 15ಕ್ಕೆ ಮೊದಲ ಪಟ್ಟಿ: ಮುಂಬರುವ ವಿಧಾನಸಭೆ ಚನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಏಪ್ರಿಲ್ 10–15ರ ಒಳಗೆ ಬಿಡುಗಡೆ ಮಾಡುವುದಾಗಿ ಅವರು ತಿಳಿಸಿದರು.
‘ಇನ್ನು 6 ತಿಂಗಳಲ್ಲಿ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಉಪ ಚುನಾವಣೆಗೆ ವ್ಯರ್ಥವಾಗಿ ಸಮಯ, ಹಣ ಖರ್ಚು ಮಾಡುವುದು ಬೇಡ ಎಂಬ ಕಾರಣಕ್ಕೆ ನಂಜನಗೂಡು, ಗುಂಡ್ಲುಪೇಟೆ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿಲ್ಲ. ಇದರಲ್ಲಿ ಯಾವುದೇ ಒಳ ಒಪ್ಪಂದ ಇಲ್ಲ’ ಎಂದು ಅವರು ಹೇಳಿದರು.