ಲಾಹೋರ್: ಸ್ವಾತಂತ್ರ್ಯ ಹೋರಾಟಗಾರ ಹಾಗೂ ಕ್ರಾಂತಿಕಾರಿ ನಾಯಕ ಭಗತ್ ಸಿಂಗ್ ಅವರ ಪುಣ್ಯ ತಿಥಿ ಕಾರ್ಯಕ್ರಮಕ್ಕೆ ರಕ್ಷಣೆ ಕೋರಿ ಪಾಕಿಸ್ತಾನದ ಲಾಹೋರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ಭಗತ್ ಸಿಂಗ್ ಸ್ಮಾರಕ ಫೌಂಡೇಷನ್ ವತಿಯಿಂದ ಮಾರ್ಚ್ 23ರಂದು ಫವಾರ ಚೌಕ್ನಲ್ಲಿ ನಡೆಸಲು ಉದ್ದೇಶಿಸಲಾಗಿರುವ ಪುಣ್ಯ ಸ್ಮರಣೆ ಕಾರ್ಯಕ್ರಮಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಫೌಂಡೇಷನ್ ಅಧ್ಯಕ್ಷ ಅಡ್ವೊಕೇಟ್ ಇಮ್ತಿಯಾಜ್ ಖುರೇಷಿ ನ್ಯಾಯಾಲಯವನ್ನು ಕೋರಿದ್ದಾರೆ.
ಅರ್ಜಿಯಲ್ಲಿ, ‘ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ಸಾಧ್ಯತೆ ಇರುವುದರಿಂದ ಈ ಕುರಿತು ಸಂಬಂಧಿಸಿದ ಆಡಳಿತ ಹಾಗೂ ಅಧಿಕಾರಿ ವರ್ಗಕ್ಕೆ ಸೂಕ್ತ ಭದ್ರತೆ ಒದಗಿಸಲು ಆದೇಶಿಸಬೇಕು’ ಎಂದು ಉಲ್ಲೇಖಿಸಿದ್ದಾರೆ.
ಜತೆಗೆ ಪಂಜಾಬ್ ಮುಖ್ಯ ಕಾರ್ಯದರ್ಶಿ ಹಾಗೂ ಲಾಹೋರ್ ಪೋಲಿಸ್ ಮುಖ್ಯಸ್ಥರಿಗೂ ಸಾರ್ವಜನಿಕ ಕಾರ್ಯಕ್ರಮಕ್ಕೆ ರಕ್ಷಣೆ ಒದಗಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.