ದಾವಣಗೆರೆ: ಬಾಲ ಕಾರ್ಮಿಕ ಪದ್ಧತಿಯಿಂದ ಮಕ್ಕಳ ಬಾಲ್ಯವಷ್ಟೇ ಅಲ್ಲ ಅವರ ಭವಿಷ್ಯವೂ ಕಮರಿ ಹೋಗುತ್ತದೆ. ಹೀಗಾಗಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ತಹಶೀಲ್ದಾರ್ ಸಂತೋಷ್ ಕುಮಾರ್ ಮನವಿ ಮಾಡಿದರು.
ನಗರದ ಹಳೆ ಬಸ್ನಿಲ್ದಾಣದಲ್ಲಿ ಮಂಗಳವಾರ ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನಾ ಸಂಸ್ಥೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಏರ್ಪಡಿಸಿದ್ದ ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಜಾಗೃತಿ ಮೂಡಿಸುವ ಬೀದಿನಾಟಕ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
14 ವರ್ಷದೊಳಗಿನ ಮಕ್ಕಳು ಯಾವುದೇ ಕ್ಷೇತ್ರದಲ್ಲಿ ದುಡಿಯುತ್ತಿದ್ದರೆ ಸಾರ್ವಜನಿಕರು ಸಂಬಂಧಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಬೇಕು. ಈ ಮೂಲಕ ಸರ್ಕಾರದ ಪ್ರಯತ್ನಕ್ಕೆ ಬೆಂಬಲ ನೀಡಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಬೇಬಿ ಸುನೀತಾ ಮಾತನಾಡಿ, ‘ಬಾಲ ಕಾರ್ಮಿಕ ಪದ್ಧತಿಗಳನ್ನು ನಿರ್ಮೂಲನೆಗೊಳಿಸಲು ಸರ್ಕಾರ ಎಷ್ಟು ಅಧಿಕಾರಿಗಳನ್ನು ನೇಮಿಸಿದರೂ ಸಾರ್ವಜನಿಕರ ಸಹಕಾರವಿಲ್ಲದೆ ಅದು ಕಷ್ಟಸಾಧ್ಯ.
ಬಾಲಕಾರ್ಮಿಕರನ್ನು ಮುಖ್ಯವಾಹಿನಿಗೆ ತರಲು ಸಾರ್ವಜನಿಕರ ಸಹಕಾರ ಬೇಕು. ಎಲ್ಲ ಮಕ್ಕಳಿಗೂ ಸಮಾನ ಹಕ್ಕುಗಳು ಇವೆ. ಆದ್ದರಿಂದ ಸಾರ್ವಜನಿಕರು ಬಾಲಕಾರ್ಮಿಕರನ್ನು ಗುರುತಿಸಿ ಅವರನ್ನು ಅದರಿಂದ ಮುಕ್ತಗೊಳಿಸಲು ನೆರವಾಗಬೇಕು ಎಂದು ತಿಳಿಸಿದರು.
ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನಾ ಸಂಸ್ಥೆ ಸದಸ್ಯ ಕಾರ್ಯದರ್ಶಿ ನಾಗೇಶ್ ಮಾತನಾಡಿ, ‘ಪರಿಶಿಷ್ಟ ಜಾತಿ ಮತ್ತು ವರ್ಗದ ಜನಸಂಖ್ಯೆ ಹೆಚ್ಚಿರುವ ಜಿಲ್ಲೆಯ 20 ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮಾರ್ಚ್ 28ರವರೆಗೆ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಸಂದೇಶ ಸಾರುವ ಬೀದಿನಾಟಕಗಳನ್ನು ಪ್ರದರ್ಶಿಸಲಾಗುವುದು ಎಂದರು.
ಜನಕಲಾ ಸಮಿತಿ ಕಲಾವಿದರಾದ ಆಂಜಿನಪ್ಪ, ಐರಣಿ ಚಂದ್ರು ಹಾಗೂ ಇತರರು ಬೀದಿ ನಾಟಕ ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಭೂಪಾಲ್, ಮುಮ್ತಾಜ್ ಬೇಗಂ, ಪ್ರಸನ್ನಕುಮಾರ್, ಆಶಾ ಮತ್ತಿತರರು ಇದ್ದರು.