ಸುರಪುರ: ‘ವಕೀಲರು ಇತರರಿಗೆ ಮಾದರಿಯಾಗುವಂತೆ ನಡೆದುಕೊಳ್ಳಬೇಕು. ವಕೀಲರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ. ವಕೀಲರು ವೃತ್ತಿ ಘನತೆ ಕಾಪಾಡಿಕೊಳ್ಳಬೇಕು’ ಎಂದು ವಕೀಲರ ಸಂಘದ ನೂತನ ಅಧ್ಯಕ್ಷ ಸೂಗೂರ ಸಿದ್ರಾಮಪ್ಪ ಹೇಳಿದರು.
ಇಲ್ಲಿಯ ನ್ಯಾಯಾಲಯದ ವಕೀಲರ ಸಂಘದ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು.
‘ವರ್ಷದ ಹಿಂದೆ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಲಯ ಮಂಜೂರು ಆದರೂ ಕಾರ್ಯರಂಭಗೊಂಡಿಲ್ಲ. ಶೀಘ್ರ ಕಾರ್ಯಾರಂಭ ಮಾಡಲು ಯತ್ನಿಸಲಾಗುವುದು. ಎರಡು ದಿನಗಳ ಹಿಂದೆ ಹೈಕೋರ್ಟ್ ಆಡಳಿತಾತ್ಮಕ ನ್ಯಾಯಮೂರ್ತಿಯ ಭೇಟಿ ಮಾಡಿ ನ್ಯಾಯಾಧೀಶರ ಒದಗಿಸುವಂತೆ ಮನವಿ ಸಲ್ಲಿಸಲಾಗಿದೆ’ ಎಂದರು.
‘ಜಿಲ್ಲಾ ನ್ಯಾಯಾಲಯದಲ್ಲಿ ತಾಲ್ಲೂಕಿನ ಪ್ರಕರಣಗಳೇ ಹೆಚ್ಚಿನ ಸಂಖ್ಯೆಯಲ್ಲಿವೆ. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಒದಗಿಸುವಂತೆ ಮತ್ತು ಕ್ಯಾಂಟೀನ್ ಆರಂಭ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ನ್ಯಾಯಮೂರ್ತಿಗಳ ಗಮನಕ್ಕೆ ತರಲಾಗಿದೆ’ ಎಂದರು.
‘ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶೀಘ್ರದಲ್ಲಿಯೇ ನ್ಯಾಯಾಧೀಶರನ್ನು ಒದಗಿಸಿಕೊಡುವುದಾಗಿ ಆಡಳಿತಾತ್ಮಕ ನ್ಯಾಯಮೂರ್ತಿ ಎನ್.ಫಣೀಂದ್ರ ಅವರು ಭರವಸೆ ನೀಡಿದ್ದಾರೆ. ಉಳಿದ ಸಮಸ್ಯೆಗೂ ಸ್ಪಂದಿಸುವುದಾಗಿ ತಿಳಿಸಿದ್ದಾರೆ’ ಎಂದರು.