ಮಂಡ್ಯ: ‘ಕ್ರೀಡೆಯಲ್ಲಿ ಭಾಗವಹಿಸುವುದರಿಂದ ವ್ಯಕ್ತಿತ್ವ ಸುಧಾರಣೆ ಆಗುತ್ತದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದು ಎಸ್.ಬಿ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ ಸಲಹೆ ನೀಡಿದರು.
ನಗರದ ಸರ್ಎಂ.ವಿ. ಕ್ರೀಡಾಂಗಣದಲ್ಲಿ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅನ್ನಪೂರ್ಣೇಶ್ವರಿ ಯುವತಿ ಮತ್ತು ಮಹಿಳಾ ಮಂಡಳಿ ಹಾಗೂ ಚುಂಚಶ್ರೀ ತಾಲ್ಲೂಕು ಒಕ್ಕೂಟದಿಂದ ಬುಧವಾರ ನಡೆದ ಜಿಲ್ಲಾ ಕ್ರೀಡಾ ಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ವ್ಯಕ್ತಿತ್ವ ರೂಪಿಸುವಲ್ಲಿ ಕ್ರೀಡೆಯು ಮುಖ್ಯ ಪಾತ್ರ ವಹಿಸುತ್ತದೆ. ಕ್ರೀಡೆಗೆ ಯಾವುದೇ ಜಾತಿಯ ಮಿತಿಯಿಲ್ಲ. ಗ್ರಾಮೀಣ ಭಾಗದಲ್ಲಿ ಕ್ರೀಡೆಗೆ ಹೆಚ್ಚು ಒತ್ತು ಕೊಡುವ ಅವಶ್ಯಕತೆ ಇದೆ. ಎಂದರು.
ರೋಟರಿ ಕ್ಲಬ್ ಅಧ್ಯಕ್ಷ ಎ.ಸಿ. ರಮೇಶ್ ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಭಾವೈಕ್ಯ ಮೂಡಿಸುತ್ತದೆ. ಸರ್ಕಾರವು ಕ್ರೀಡಾ ಪಟುಗಳಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ನೆರವಾಗಬೇಕು ಎಂದು ಮನವಿ ಮಾಡಿದರು.
ನಗರಸಭೆ ಅಧ್ಯಕ್ಷ ಹೊಸಹಳ್ಳಿ ಬೋರೇಗೌಡ ಅಧ್ಯಕ್ಷತೆ ವಹಿಸಿದ್ದರು. ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಕೆ. ಶಿವಪ್ರಕಾಶ್ ಬಾಬು, ಸದಸ್ಯ ಎಂ.ಪಿ. ಅರುಣ್ಕುಮಾರ್, ಜಿಲ್ಲಾ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಬಿ.ವಿ. ನಂದೀಶ್, ನೆಹರೂ ಯುವ ಕೇಂದ್ರದ ಎಸ್. ಸಿದ್ದರಾಮಪ್ಪ, ಅನುಪಮಾ, ಕೋಮಲಾ ಇದ್ದರು.